ರಾಯಚೂರು: ರೈತರ ಸಾಲಮನ್ನಾ ವಿಷಯದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಬ್ಯಾಂಕುಗಳಲ್ಲಿ ರೈತರು ಪಡೆದ ಸಾಲಮನ್ನಾ ದಾಖಲೆಗಳನ್ನು ಮುಖ್ಯಮಂತ್ರಿಗೆ ಶೀಘ್ರದಲ್ಲೇನೀಡಲಾಗುವುದು. ಕಾಲಹರಣ ಮಾಡುವುದು, ಗೊಂದಲ ಮೂಡಿಸುವುದನ್ನು ಬಿಡುವಂತೆ ಒತ್ತಾಯಿಸಲಾಗುವುದು ಎಂದರು.
ದೇಶದ ಕೃಷಿ ಹಾಗೂ ರೈತರ ಬದುಕು ಸುಧಾರಿಸಲು ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ನವೆಂಬರ್ 30 ರಂದು ದೇಶದ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ದೆಹಲಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.
ರೈತರ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಹೇಳಿದರು.