ರಾಯಚೂರು: ನಗರದ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಅಧಿಕ ಸಂಖ್ಯೆಯಲ್ಲಿ ದೂರುಗಳು ಸಲ್ಲಿಕೆಯಾಗಿದ್ದು, ಮೂಲ ಸೌಕರ್ಯಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ಅಧಿಕಾರಿಗಳು ಹೆಚ್ಚು ಮುತೂವರ್ಜಿ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಳಿನ್ ಅತುಲ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಪಡೆದುಕೊಂಡು ಮಾತನಾಡಿದರು.
ನಗರ ಸೌಂದರ್ಯೀಕರಣಗೊಳ್ಳಬೇಕಾದರೆ ನಗರದ ಪ್ರತಿ ವಾರ್ಡ್ನಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಬೇಕಾಗುತ್ತದೆ. ವಾರ್ಡ್ ಸಂಖ್ಯೆ 31 ಮತ್ತು ಪ್ರತಿ ಮನೆಗೆ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಸ್ವಚ್ಚ ಭಾರತ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಪೆಟ್ರೊಲ್ ಬಂಕ್ಗಳಿಂದಾಗಿ ಮಾಲಿನ್ಯ ಹೆಚ್ಚಾಗುತ್ತಿದೆ ಎನ್ನುವ ದೂರು ಆಲಿಸಿ, ವಾಯು ಮಾಲಿನ್ಯ ಪರಿಹರಿಸಲು ಕೂಡಲೇ ನಾಲ್ಕು ಅಧಿಕಾರಿಗಳ ಒಂದು ಸಮಿತಿ ರಚಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಯಚೂರು ತಾಲ್ಲೂಕಿನ ಮರ್ಚೆಡ್ ಗ್ರಾಮದಲ್ಲಿ ಕುಡಿಯುವ ನೀರಿಗೆ ಬಹಳ ತೊಂದರೆ ಇದೆ ಎಂದು ಗ್ರಾಮಸ್ಥರು ಅರ್ಜಿ ಸಲ್ಲಿಸಿದರು. ನೀರಿನ ಶುದ್ದಿಕರಣ ಘಟಕವನ್ನು ಒಂದು ವಾರದೊಳಗೆ ಸರಿಪಡಿಸಿ ನೀಡಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.
ನಗರದಲ್ಲಿ ಪಾದಚಾರಿ ರಸ್ತೆಗಳ ಮೇಲೆ ಜನರು ವ್ಯಾಪಾರ ಮಾಡುತ್ತಿದ್ದು, ಅದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ನಗರವಾಸಿಗಳು ಮನವಿ ಮಾಡಿದರು. ಅದಕ್ಕೆ ಕೂಡಲೇ ಕ್ರಮವನ್ನು ತೆಗೆದುಕೊಂಡು ಸರಿಪಡಿಸುವಂತೆ ನಗರಸಭೆ ಪೌರಾಯುಕ್ತರಿಗೆ ಹೇಳಿದರು.
ಆಹಾರ ಇಲಾಖೆಯಲ್ಲಿ ಐದು ಬಾರಿ ಅಮಾನತು ಆಗಿರುವ ಇನ್ಸ್ಪೆಕ್ಟರ್ ಅವರನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕು ಎಂದು ಮನವಿ ಸಲ್ಲಿಕೆಯಾಗಿರುವುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಆಹಾರ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಲಾಯಿತು. ಶಾಂತಿನಗರದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಮನೆ ನಿರ್ಮಿಸಿಕೊಳ್ಳುವಾಗ ಸಾರ್ವಜನಿಕ ರಸ್ತೆಯಲ್ಲಿ ತಾತ್ಕಾಲಿಕ ಶೆಡ್ ಹಾಕಿಕೊಂಡಿದ್ದರು. ಮನೆ ನಿರ್ಮಾಣ ಮುಗಿದಿದ್ದರೂ ತಾತ್ಕಾಲಿಕ ಶೆಡ್ ತೆಗೆದುಹಾಕದೆ, ಮಾರ್ಗ ಬಂದ್ ಮಾಡಿದ್ದಾರೆ. ಇದರಿಂದ ಜನರು ತಾಪತ್ರಯ ಅನುಭವಿಸುತ್ತಿದ್ದಾರೆ ಎಂದು ರಫಿಕ್ ಅವರು ದೂರು ಸಲ್ಲಿಸಿದರು.
ಒಂದು ವಾರದೊಳಗೆ ಅತಿಕ್ರಮಣವನ್ನು ತೆರವು ಮಾಡಿಸಲಾಗುವುದು ಎಂದು ನಳಿನ್ ಅತುಲ್ ಅವರು ತಿಳಿಸಿದರು.
ಪ್ರೋಬೆಷನರಿ ಐಎಎಸ್ ಅಧಿಕಾರಿ ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ನಗರಸಭೆ ಪೌರಾಯುಕ್ತ ರಮೇಶ ನಾಯಕ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸರೋಜಾ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ವೈ.ಎ.ಕಾಳೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.