ರಾಯಚೂರು: ದೇವದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಹತ್ತಿ ಹೊಲ ಮತ್ತು ಮೆಣಸಿನಕಾಯಿ ಹೊಲದಲ್ಲಿ ದಾಳಿ ಮಾಡಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ 14 ವರ್ಷದೊಳಗಿನ 8 ಬಾಲಕಾರ್ಮಿಕ ಮಕ್ಕಳನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಜ.6ರಂದು ದೇವದುರ್ಗ ತಾಲ್ಲೂಕು ಆಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಕ್ಕಳ ರಕ್ಷಣಾ ಘಟಕ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿದ್ದರು.
ಬಾಲ ಕಾರ್ಮಿಕರನ್ನು ದೇವದುರ್ಗದ ಕ್ಷೇತ್ರ ಶಿಕ್ಷಣಾಧಿಕಾರಿ ಒಪ್ಪಿಸಿ, ಪ್ರತಿ ನಿತ್ಯ ಶಾಲೆಗೆ ಬರುವಂತೆ ನೋಡಿಕೊಳ್ಳಲು ತಿಳಿಸಲಾಯಿತು. ಹೊಲದ ಮಾಲೀಕರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಯಿತು.
ವಾಹನಗಳ ಮುಖಾಂತರ ಮಕ್ಕಳನ್ನು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿ ಗೂಡ್ಸ್ ವಾಹನಗಳಲ್ಲಿ ಹಿಂತಿರುಗುವ ಸಂದರ್ಭದಲ್ಲಿ ದೇವದುರ್ಗ ತಾಲೂಕಿನ ಸಿರವಾರ ಕ್ರಾಸ್, ಸುಂಕೇಶ್ವರಾಳ, ಗಬ್ಬೂರು ಮತ್ತು ದೇವದುರ್ಗ ಮುಖ್ಯರಸ್ತೆಯಲ್ಲಿ ವಾಹನಗಳ ತಪಾಸಣೆ ಮಾಡಿ 13 ಮಕ್ಕಳ ರಕ್ಷಣೆ ಮಾಡಿ ಪಾಲಕರಿಗೆ ಒಪ್ಪಿಸಲಾಗಿದೆ.
ಇನ್ನು ಮುಂದೆ ಯಾವುದೇ ಕಾರಣಕ್ಕೂ ಮಕ್ಕಳನ್ನು ಕೆಲಸದಲ್ಲಿ ತೊಡಗಿಸಲು ಕರೆದುಕೊಂಡು ಹೋಗಬಾರದೆಂದು ತಿಳಿವಳಿಕೆ ನೀಡಲಾಯಿತು.
ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ, ದೇವದುರ್ಗ ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ, ಶಿಕ್ಷಣ ಇಲಾಖೆ ಇಸಿಓ ರಾಜನಗೌಡ, ಸಾರಿಗೆ ನಿರೀಕ್ಷಕ ಬುಗ್ಗಾರೆಡ್ಡಿ, ಗ್ರಾಮ ಆಡಳಿತಾಧಿಕಾರಿ ವೀರೇಶ,ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ತಿಕ್ಕಯ್ಯ, ಪೊಲೀಸ್ ಇಲಾಖೆಯ ಅಧಿಕಾರಿ ಚನ್ನಪ್ಪ ಪಾಲ್ಗೊಂಡಿದ್ದರು.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016 ರಂತೆ 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 15 ರಿಂದ18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಒಂದು ವೇಳೆ ದುಡಿಸಿಕೊಂಡಲ್ಲಿ ₹ 50 ಸಾವಿರ ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ಇದೆ. ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಕಾರ್ಮಿಕ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.