ರಾಯಚೂರು: ದೇವದುರ್ಗ ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಬಿಡುಗಡೆಯಾದ ಅನುದಾನ ಖರ್ಚು ಮಾಡದೇ ಶಾಸಕ ಶಿವನಗೌಡ ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಪದಾಧಿಕಾರಿಗಳು ಮಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ದೇವದುರ್ಗ ತಾಲ್ಲೂಕಿನಲ್ಲಿ ವಿಶೇಷ ಅಭಿವೃದ್ಧಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದ ಜನರು ವಾಸವಾಗಿರುವ ಬಡಾವಣೆಗಳಲ್ಲಿ ರಸ್ತೆ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಿದ್ದು ₹20 ಕೋಟಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಶಾಮೀಲಾಗಿದ್ದು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ದೇವದುರ್ಗ ತಾಲ್ಲೂಕಿನಲ್ಲಿ ಮರಳು ಸಾಗಣೆಯ ಪರವಾನಗಿ ಅವಧಿ ಮುಗಿದರೂ ಹಗಳಿರುಳು ಅಕ್ರಮ ಮರಳು ಸಾಗಣೆ ಮಾಡುತ್ತಿದ್ದಾರೆ. ಜಿಲ್ಲಾ ಪೊಲಿಸ್ ಇಲಾಖೆ ಹಾಗೂ ಜಿಲ್ಲಾಡಳಿತ ಅಕ್ರಮ ಮರಳು ಸಾಗಣೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಪ್ರತಿಭಟನೆಯಲ್ಲಿ ದೇವದುರ್ಗ ತಾಲ್ಲೂಕಿನ ಜೆಡಿಎಸ್ ಘಟಕದ ಅಧ್ಯಕ್ಷೆ ಕರೆಮ್ಮ ನಾಯಕ, ಅಕ್ಬರ್ ಹುಸೇನ್ ನಾಗುಂಡಿ, ರೇಣುಕಾ ಎಂ ಸ್ವಾಮಿ, ಸಂತೋಶ ನಾಯಕ, ಖಾಜನಗೌಡ, ರಾಯಣ್ಣ ಇದ್ದರು.