ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಧನೂರು: ಜನವಿರೋಧಿ ತಿದ್ದುಪಡಿ ಕಾಯ್ದೆಗಳ ರದ್ದತಿಗೆ ಆಗ್ರಹ

ಮಿನಿವಿಧಾನಸೌಧ ಮುಂದೆ ಕೆಆರ್‌ಎಸ್ ಪ್ರತಿಭಟನೆ
Last Updated 9 ಆಗಸ್ಟ್ 2020, 14:13 IST
ಅಕ್ಷರ ಗಾತ್ರ

ಸಿಂಧನೂರು: ಸಂಸತ್ ಮತ್ತು ವಿಧಾನಮಂಡಲಗಳನ್ನು ಕತ್ತಲಲ್ಲಿಟ್ಟು, ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ಜನ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘ (ಎಐಕೆಕೆಎಸ್) ಜಿಲ್ಲಾ ಘಟಕದಿಂದ ಭಾನುವಾರ ಸ್ಥಳೀಯ ಮಿನಿವಿಧಾನಸೌಧ ಮುಂದೆ ಪ್ರತಿಭಟಿಸಲಾಯಿತು.

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ರೈತ, ಕಾರ್ಮಿಕರಿಗೆ ಅಪಾಯ ತಂದೊಡ್ಡುವ ನೀತಿಗಳನ್ನು ಜಾರಿಗೊಳಿಸುತ್ತಿದೆ. ಸ್ವದೇಶಿ ಮಂತ್ರ ಹೇಳುತ್ತಾ ವಿದೇಶಿ ಕಂಪನಿಗಳಿಗೆ ದೇಶವನ್ನು ಒತ್ತೆಹಾಕಲಾಗಿದೆ. 70 ವರ್ಷಗಳಿಂದ ದೇಶವನ್ನು ಆಳಿದ ಕಾಂಗ್ರೆಸ್‍ನವರು ದೇಶದ ಸಂಪತ್ತನ್ನು ಮಾರಾಟ ಮಾಡಿದ್ದಲ್ಲದೇ ₹ 50 ಲಕ್ಷ ಕೋಟಿ ಸಾಲ ಮಾಡಿದ್ದರು. ಆದರೆ ಬಿಜೆಪಿ ಸರ್ಕಾರ ಕೇವಲ 6 ವರ್ಷಗಳಲ್ಲಿ ದೇಶದ ಸಂಪತ್ತನ್ನು ಕಾರ್ಪೋರೇಟ್ ಕಂಪನಿಗಳಿಗೆ ಮಾರಾಟ ಮಾಡಿ ಕಾಂಗ್ರೆಸ್‍ನವರನ್ನು ಮೀರಿಸಲಾಗಿದೆ. ಇದಲ್ಲದೆ ದೇಶದ ಸಾಲ ₹ 86 ಲಕ್ಷ ಕೋಟಿ ಹೆಚ್ಚಾಗಿದೆ ಎಂದು ಕರ್ನಾಟಕ ರೈತ ಸಂಘ ರಾಜ್ಯ ಘಟಕದ ಅಧ್ಯಕ್ಷ ಡಿ.ಎಚ್.ಪೂಜಾರ ಆಪಾದಿಸಿದರು.

ಕಾರ್ಪೋರೇಟ್ ಕಂಪನಿ ಪರವಾದ ಸುಗ್ರೀವಾಜ್ಞೆ ಸರಣಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಪಡಿಸಬೇಕು. ಕೃಷಿ ಕಾಂಟ್ರ್ಯಾಕ್ಟ್ ಫಾರ್ಮಿಂಗ್ ತಿದ್ದುಪಡಿ ಕಾಯ್ದೆ, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ, ಅಂತರರಾಜ್ಯ ತಿದ್ದುಪಡಿ ಕಾಯ್ದೆ, ಹೊಸ ವಿದ್ಯುತ್ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡಿಯಬೇಕು. ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆ ಕೈಬಿಡಬೇಕು. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಖಾತ್ರಿ ಪಡಿಸುವ ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು. ಉದ್ಯೋಖಾತ್ರಿಯ ಕೆಲಸವನ್ನು 200 ದಿನಗಳಿಗೆ ಹೆಚ್ಚಿಸಿ, ದಿನದ ಕೂಲಿ ₹ 800 ನಿಗದಿಪಡಿಸಬೇಕೆಂದು ಒತ್ತಾಯಿಸಿದರು.

ಗ್ರಾಮ ಲೆಕ್ಕಿಗ ಯೂನೂಸ್ ಮನವಿ ಪತ್ರ ಸ್ವೀಕರಿಸಿದರು. ಕೆಆರ್‌ಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಪಾಟೀಲ ಬೇರಿಗಿ, ಮುಖಂಡರಾದ ಬಿ.ಎನ್.ಯರದಿಹಾಳ, ದ್ಯಾಮಣ್ಣ ನಾಯಕ, ಬಿಟ್ಟಿಬಾಬು, ಅಮೀನಸಾಬ ನದಾಫ, ಎನ್.ಗೋಪಾಲರಾವ್, ಎಂ.ಗಂಗರಾಜ, ಶಿವು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT