ರಾಯಚೂರು: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ಯುವತಿಯ ಮೇಲಿನ ಅತ್ಯಾಚಾರ, ಕೊಲೆ ಘಟನೆಯನ್ನು ಖಂಡಿಸಿ ಜನಾಂದೋಲನಗಳ ಮಹಾಮೈತ್ರಿ ಮತ್ತು ಸಂವಿಧಾನ ಹಕ್ಕುಗಳಿಗಾಗಿ ನಾಗರೀಕ ವೇದಿಕೆಯಿಂದ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಪ್ರಕರಣದಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳಿಗೆ ಉಗ್ರ ಶಿಕ್ಷೆಗೊಳಪಡಿಸಬೇಕು. ಉತ್ತರ ಪ್ರದೇಶದಲ್ಲಿ ಪರಿಶಿಷ್ಟರ ಮೇಲೆ ಪ್ರತಿನಿತ್ಯ ಒಂದಲ್ಲೊಂದು ಘಟನೆಗಳು ನಡೆಯುತ್ತಲೇ ಇವೆ. ಈ ಎಲ್ಲ ಘಟನೆಗಳಿಗೆ ಅಲ್ಲಿನ ಬಿಜೆಪಿ ಸರ್ಕಾರವೇ ನೇರ ಹೊಣೆಯಾಗಿದೆ. ಕೂಡಲೇ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಉತ್ತರ ಪ್ರದೇಶದ ಸರ್ಕಾರವನ್ನು ಕೂಡಲೇ ವಜಾ ಮಾಡಬೇಕು. ಅಲ್ಲಿನ ಪತ್ರಕರ್ತರು, ಪರಿಶಿಷ್ಟರಿಗೆ, ಹೋರಾಟಗಾರರಿಗೆ ಸೂಕ್ತ ರಕ್ಷಣೆ ನೀಡಬೇಕು. ಅತ್ಯಾಚಾರಕ್ಕೊಳಗಾದ ಯವತಿಯ ಕುಟುಂಬದವರಿಗೆ ಆರ್ಥಿಕ ನೆರವಿನೊಂದಿಗೆ ರಕ್ಷಣೆ ನೀಡಬೇಕು. ಪ್ರಕರಣ ಮುಚ್ಚಿ ಹಾಕಲು ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹೋರಾಟಗಾರರಾದ ವಿದ್ಯಾ ಪಾಟೀಲ, ಖಾಜಾ ಅಸ್ಲಂ ಅಹಮ್ಮದ್, ಆಂಜನೇಯ ಕುರಬದೊಡ್ಡಿ, ಗುರುರಾಜ, ಜನಾರ್ದನ ಹಳ್ಳಿ,, ಪ್ಯಾರಮ್ಮ, ದುರ್ಗಾಶ್ರೀ, ಶ್ರೀನಿವಾಸ ಹಾಗೂ ಮತ್ತಿತರರು ಇದ್ದರು.