ರಾಯಚೂರು: ಹಮಾಲಿ ಕಾರ್ಮಿಕರಿಗೆ ಲಾಕ್ಡೌನ್ ಪರಿಹಾರ ನೀಡಬೇಕು ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಎಪಿಎಂಸಿ ಗಂಜ ಹಮಾಲರ ಸಂಘ (ಸಿಐಟಿಯು ಸಂಯೋಜಿತ) ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಆ ನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ, ರಾಜ್ಯದಲ್ಲಿರುವ ಎಪಿಎಂಸಿ, ಗ್ರಾಮೀಣ ಬಜಾರ, ವೇರಹೌಸ್, ಗುಡಶೆಡ್, ಟ್ಯ್ರಾನ್ಸಪೋರ್ಟ, ಇತ್ಯಾದಿ ಹಮಾಲಿ ಕಾರ್ಮಿಕರು ಲಾಕ್ಡೌನ್ ಅವಧಿಯಲ್ಲಿ ತೊಂದರೆ ಅನುಭವಿಸಿದ್ದು, ಅವರಿಗೆ ಸಹಾಯಧನನೀಡಬೇಕು ಎಂದುಒತ್ತಾಯಿಸಿದರು.
ರಾಜ್ಯ ಸರಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಿ ಮುಕ್ತ ಮಾರುಕಟ್ಟೆಗೆ ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಹತ್ತಾರು ವರ್ಷಗಳಿಂದ ಎಪಿಎಂಸಿ ಆವರಣದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸುಮಾರು ಒಂದು ಲಕ್ಷದಷ್ಟು ಹಮಾಲಿ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದರು.
ಎಪಿಎಂಸಿಯ ಹಲವಾರು ಯೋಜನೆಗಳಿಂದಲೂ ವಂಚಿತರಾಗುವ ಸಾಧ್ಯತೆಯಿದ್ದು, ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ಕೂಡಲೇ ವಾಪಾಸು ಪಡೆಯಬೇಕು. ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಭವಿಷ್ಯನಿಧಿ ಯೋಜನೆ, ಪಿಂಚಣಿ ಜಾರಿಮಾಡಬೇಕು. ಪ್ರಧಾನಮಂತ್ರಿ ಜೀವನ ಭೀಮಾ ಮತ್ತು ಸುರಕ್ಷಾ ವಿಮಾ ಯೋಜನೆಗಳಿಗೆ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸುವ ಕಾರ್ಯ ಕೂಡಲೇ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಪ್ರಹ್ಲಾದ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಡಿ.ಎಸ್.ಶರಣಬಸವ, ಉಪಧ್ಯಕ್ಷ ಲಕ್ಷ್ಮೀದೇವಮ್ಮ, ಬಿ.ರಾಮರೆಡ್ಡಿ, ಖಾಜಸಾಬ್, ಹುಸೇನಪ್ಪ, ವರಲಕ್ಷ್ಮೀ, ಕೆ.ಜಿ.ವೀರೇಶ ಇದ್ದರು.