ರಾಯಚೂರು: ತಾಲ್ಲೂಕಿನ ಎಲೆ ಬಿಚ್ಚಾಲಿ ಗ್ರಾಮದ ನ್ಯಾಯಬೆಲೆ ಅಂಗಡಿಯ ಮಾಲೀಕ ಕೆ.ಗೋಪಾಲ ಸಮರ್ಪಕವಾಗಿ ಪಡಿತರ ಧಾನ್ಯ ವಿತರಣೆ ಮಾಡುತ್ತಿಲ್ಲ. ಆದ್ದರಿಂದ ಕೆರೆಬೂದೂರು ಹರಿಶ್ಚಂದ್ರ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿಗಳನ್ನು ಜೋಡಣೆ ಮಾಡಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಸೋಮವಾರ ಪ್ರತಿಭಟನೆ ನಡೆಸಿದರು.
ನ್ಯಾಯಬೆಲೆ ಅಂಗಡಿ ಸರಿಯಾಗಿ ನಿರ್ವಹಣೆ ಮಾಡದೇ ಸಾಕಷ್ಟು ಅವ್ಯವಹಾರ ನಡೆಸಿರುವ ಹಿನ್ನೆಲೆಯಲ್ಲಿ ಆಗಿನ ಜಿಲ್ಲಾಧಿಕಾರಿ ನ್ಯಾಯಬೆಲೆ ಅಂಗಡಿ ಪರವಾನಿಗೆ ರದ್ದುಪಡಿಸಿದ್ದರು. ಆದರೆ, ಅವರು ವರ್ಗಾವಣೆಯಾದ ನಂತರ ನ್ಯಾಯಬೆಲೆ ಅಂಗಡಿ ನಿರ್ವಹಣೆ ಮಾಡಲು ಅವಕಾಶ ನೀಡಿ ಪಡಿತರದಾರರಿಗೆ ವಂಚನೆ ಮಾಡಲಾಗುತ್ತಿದೆ. ಈ ಮೂಲಕ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಆರೋಪಿಸಿದರು.
ಗ್ರಾಮದಲ್ಲಿ 450ಕ್ಕೂ ಅಧಿಕ ಪಡಿತರ ಚೀಟಿ ಇದ್ದು, ಪಡಿತರದಾರರಿಗೆ ಕುಂಟುನೆಪ ಹೇಳಿ ಪಡಿತರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ತನಿಖೆಯಲ್ಲಿ ಅವ್ಯವಹಾರ ಸಾಬೀತುಗೊಂಡಿದ್ದರೂ, ಮತ್ತೆ ನ್ಯಾಯಬೆಲೆ ಅಂಗಡಿ ನಿರ್ವಹಣೆಗೆ ಅವಕಾಶ ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನ್ಯಾಯಸಮ್ಮತವಾಗಿ ಪಡಿತರ ವಿತರಣೆ ಮಾಡಲು ಹರಿಶ್ಚಂದ್ರ ಅಥವಾ ಬೇರೆಯವರಿಗೆ ಹೊಣೆ ನೀಡಬೇಕು. ಇಲ್ಲದಿದ್ದರೆ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.