ಮಸ್ಕಿ: ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ (ಎಐಕೆಕೆಎಸ್) ಸಂಘಟನೆ ಕಾರ್ಯಕರ್ತರು ಭಾನುವಾರ ಪಟ್ಟಣದ ಡಾ. ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.
1942ರ ಕ್ವಿಟ್ ಇಂಡಿಯಾ ಚಳುವಳಿ ದೇಶದ ಸ್ವಾತಂತ್ರ್ಯಕ್ಕೆ ಅಂತಿಮ ಘಟ್ಟವಾಗಿತ್ತು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಲಕ್ಷಾಂತರ ಹುತಾತ್ಮರ ಆಶಯಗಳಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ದೇಶದ ಕಾರ್ಮಿಕ ಹಾಗೂ ರೈತರ ಹಿತ ಬಲಿಕೊಟ್ಟು ಕೇಂದ್ರ ಸರ್ಕಾರ ಕಾರ್ಪೊರೇಟ್ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಕೂಡಲೇ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನ ಕೈಬಿಡಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ದಿನ್ನಿ, ಮಾರುತಿ ಜಿನ್ನಾಪೂರ, ಪರಶುರಾಮ ಹಿರೇದಿನ್ನಿ, ಮೌನೇಶ ತುಗ್ಗಲದಿನ್ನಿ, ಸಿದ್ದಪ್ಪ ಗೋನಾಳ, ಅಮರೇಶ ಪಾಮನಕೆಲ್ಲೂರು ಪಾಲ್ಗೊಂಡಿದ್ದರು.