ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು: ನೀಟ್ ಪರೀಕ್ಷೆಯ ಅಕ್ರಮದ ತನಿಖೆ ನಡೆಸುವಂತೆ ಒತ್ತಾಯಿಸಿ ಪ್ರತಿಭಟನೆ

Published 11 ಜೂನ್ 2024, 14:20 IST
Last Updated 11 ಜೂನ್ 2024, 14:20 IST
ಅಕ್ಷರ ಗಾತ್ರ

ರಾಯಚೂರು: ವೈದ್ಯಕೀಯ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಿರುವ ನೀಟ್ (ಯುಜಿ) ಪರೀಕ್ಷೆಯ ಫಲಿತಾಂಶದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್  ಆರ್ಗನೈಜೇಶನ್ (ಎಐಡಿಎಸ್‌ಒ) ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದ ಜಿಲ್ಲಾ ಘಟಕದ ಪದಾಧಿಕಾರಿಗಳು ಆನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. 

ಜೂನ್ 4ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯುಜಿಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಾಣಿಕೆಯಾಗುತ್ತಿಲ್ಲ ಎಂದು ದೂರಿದರು.

‘ಪರೀಕ್ಷೆ ಬರೆದ ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುವುದಾಗಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಸಮಜಾಯಿಷಿ ನೀಡಿದೆ. ಆದರೆ, ಹೆಚ್ಚುವರಿ ಅಂಕಗಳನ್ನು ನೀಡಿರುವ ಮಾನದಂಡವು ಸಂಪೂರ್ಣವಾಗಿ ಪಕ್ಷಪಾತಿಯಾಗಿದೆ’ ಎಂದು ಎಐಡಿಎಸ್ ಒ ಜಿಲ್ಲಾ ಘಟಕದ ಅಧ್ಯಕ್ಷ ಹಯ್ಯಾಳಪ್ಪ ಆರೋಪಿಸಿದರು.

ಪ್ರಸ್ತುತ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ. ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕ ಗಳಿಸಿದ್ದಾರೆ. ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿತ್ತು ಎಂಬ ಆರೋಪಗಳಿದ್ದು ಇದರ ಬಗ್ಗೆ ಸಮರ್ಪಕ ತನಿಖೆ ನಡೆಸಿಲ್ಲ. ಅನಿರೀಕ್ಷಿತ ಕೆಟ್ಟ ಫಲಿತಾಂಶದಿಂದಾಗಿ ಈಗಾಗಲೇ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ತುತ್ತಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಐಡಿಎಸ್‌ಒ ಜಿಲ್ಲಾ ಘಟಕದ ಉಪಾಧ್ಯಕ್ಷ ಪೀರ್ ಸಾಬ್ ಮಾತನಾಡಿ, ಈ ಮುಂಚೆ ರಾಜ್ಯಮಟ್ಟದಲ್ಲಿ ಜಂಟಿ ಪ್ರವೇಶ ಪರೀಕ್ಷೆಗಳು ಜಾರಿಯಲ್ಲಿದ್ದಾಗ ಭ್ರಷ್ಟಾಚಾರದ ಕಾರಣ ಒಡ್ಡಿಯೇ ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆಯನ್ನು ಪ್ರಾರಂಭಿಸಲಾಗಿತ್ತು. ಭ್ರಷ್ಟಾಚಾರದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟವರಿಗೆ ಸೂಕ್ತ ಶಿಕ್ಷೆ ವಿಧಿಸುವುದರ ಬದಲಿಗೆ ಪರೀಕ್ಷಾ ಪದ್ಧತಿಯನ್ನು ಬದಲಾಯಿಸುವುದು ಪರಿಹಾರವಲ್ಲ. ಈ ಬಗ್ಗೆ ನಮ್ಮ  ಸಂಘಟನೆಯಿಂದ ಎಚ್ಚರಿಕೆ ನೀಡಲಾಗಿತ್ತು. ಆದರೂ ಸರ್ಕಾರ ಗಂಭೀರವಾಗಿರಲಿಲ್ಲ ಎಂದು ಆರೋಪಿಸಿದರು.

ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣ ವ್ಯಾಪಾರಿಕರಣದ ಉದ್ದೇಶದಿಂದ ಇಡೀ ವೈದ್ಯಕೀಯ ಪ್ರವೇಶ ಪರೀಕ್ಷೆಯು ಕುಸಿತಕ್ಕೊಳಗಾಗುತ್ತಿದೆ. ಇದರಿಂದ ಅಮಾಯಕ ವಿದ್ಯಾರ್ಥಿಗಳು ಬಲಿಪಶುಗಳಾಗಿದ್ದಾರೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನಡೆಸಬೇಕು. ತಪ್ಪಿತಸ್ಥರ ಮೇಲೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಘಟಕದ  ಉಪಾಧ್ಯಕ್ಷ ಹೇಮಂತ್, ಮುಖಂಡರಾದ ವೀರೇಶ, ಬಸವರಾಜ, ಅಮೋಘ, ನಂದಗೋಪಾಲ, ಅರವಿಂದ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT