ರಾಯಚೂರು: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಎಫ್ ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿ ದಲಿತಪರ ಸಂಘಟನೆಗಳ ಒಕ್ಕೂಟವು ರಾಯಚೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆಯನ್ನು ಮುಂದುವರಿಸಿವೆ.
ಮಧ್ಯಾಹ್ನ ಕೆಲಕಾಲ ಪ್ರತಿಭಟನೆ ಸ್ಥಗಿತಗೊಳಿಸಿ ಮೆರವಣಿಗೆ ನಡೆಸಿದ್ದರಿಂದ, ವಾಹನಗಳ ಸಂಚಾರ ಆರಂಭವಾಗಿತ್ತು. ಕೇಂದ್ರ ಬಸ್ ನಿಲ್ದಾಣ ಪಕ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾಕಾರರು ಸಂಜೆ ಸೇರಿಕೊಂಡಿದ್ದು ಘೋಷಣೆಗಳನ್ನು ಕೂಗುತ್ತಿದ್ದಾರೆ.
ಹೆದ್ದಾರಿಯಲ್ಲಿ ವಾಹನಗಳು ಸಾಲಾಗಿ ನಿಂತಿದ್ದು, ದೂರದ ಸ್ಥಳಗಳಿಗೆ ತೆರಳುವ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.
ಕೆಲವು ವಾಹನಗಳು ಬಡಾವಣೆ ರಸ್ತೆಗಳ ಮೂಲಕ ಸಂಚರಿಸುತ್ತಿವೆ. ಮಂತ್ರಾಲಯ ಕಡೆಗೆ ಸಂಚರಿಸುವ ಸರ್ಕಾರಿ ಬಸ್ಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುತ್ತಿವೆ.