ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ಸಮೀಕ್ಷೆಯಲ್ಲಿ ಜಿಲ್ಲೆಗೆ 9ನೇ ಸ್ಥಾನ: ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್‌

Last Updated 4 ಸೆಪ್ಟೆಂಬರ್ 2021, 13:36 IST
ಅಕ್ಷರ ಗಾತ್ರ

ರಾಯಚೂರು: 2021- 22ನೇ ಸಾಲಿನ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆಯಲ್ಲಿ ರಾಯಚೂರು ಜಿಲ್ಲೆಯು ರಾಜ್ಯದಲ್ಲಿ ಜಿಲ್ಲೆ 9ನೇ ಸ್ಥಾನದಲ್ಲಿದ್ದು, ಜಿಲ್ಲೆಯ ಪ್ರತಿಯೊಬ್ಬ ರೈತರು ತಮ್ಮ ಬೆಳೆಗಳನ್ನು ಸ್ವತಃ ರೈತರೇ ಸಮೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಹೇಳಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ಮಾತನಾಡಿದ ಅವರು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಬೆಳೆ ಸಮೀಕ್ಷೆಯಲ್ಲಿ ಹಿನ್ನಡೆಯಾಗಿದೆ. ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿದ್ದವು. ಆ ಸಮಸ್ಯೆಗಳನ್ನು ನಿವಾರಿಸಲು ಈಗಾಗಲೇ ಕೃಷಿ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.

ಬೆಳೆ ಸಮೀಕ್ಷೆಯನ್ನು ಮೊಬೈಲ್ ಆ್ಯಪ್‌ ಮೂಲಕ ದಾಖಲಿಸುವ ಯೋಜನೆಯನ್ನು ಸರ್ಕಾರದಿಂದ ಪ್ರಾರಂಭಿಸಲಾಗಿದ್ದು, ಜಿಲ್ಲೆಯ ಪ್ರತಿಯೊಬ್ಬ ರೈತರು ತಮ್ಮ ಬೆಳೆಗಳನ್ನು ಸ್ವತಃ ರೈತರೇ ಸಮೀಕ್ಷೆ ನಡೆಸಬೇಕು. ರೈತರು ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರಸಹಿತ ಅಪ್‌ಲೋಡ್‌ ಮಾಡಬಹುದಾಗಿದೆ. ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಹಾಗೂ ಸಾಂಖಿಕ ಇಲಾಖೆ ಜಂಟಿ ಸಹಯೋಗದಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಹೇಳಿದರು.

ರೈತರು ಸ್ಮಾರ್ಟ್ ಮೊಬೈಲ್ ಫೋನ್ ಉಪಯೋಗಿಸಿ ಆ್ಯಪ್ ಅನ್ನು ಗೂಗಲ್‌ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ರೈತರ ಪರವಾಗಿ ಅವರ ಕುಟುಂಬದ ಸದಸ್ಯರು, ಸಂಬಂಧಿಕರು ಅಥವಾ ಕಂದಾಯ, ಕೃಷಿ ಇಲಾಖೆಯಿಂದ ನಿಯೋಜನೆಗೊಂಡ ಅದೇ ಗ್ರಾಮದ ಖಾಸಗಿ ವ್ಯಕ್ತಿಗಳ ಸಹಾಯದೊಂದಿಗೆ ನಿರ್ವಹಿಸಬಹುದು. ಮೊಬೈಲ್ ಫೋನ್ ಸಂಖ್ಯೆಗೆ ಒ.ಟಿ.ಪಿ. ಪಡೆದು ಮೂಲಕ ಜಮೀನುಗಳಲ್ಲಿನ ಹಿಸ್ಸಾವಾರು ಬೆಳೆಗಳ ಮಾಹಿತಿ ದಾಖಲಿಸಬಹುದು ಎಂದು ತಿಳಿಸಿದರು.

ನಿಗದಿತ ಸಮಯದಲ್ಲಿ ಮಾಹಿತಿ ಅಪ್‌ಲೋಡ್ ಮಾಡದಿದ್ದಲ್ಲಿ ಖಾಸಗಿ ವ್ಯಕ್ತಿಗಳಿಂದ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಬಳಸಿ ಮಾಹಿತಿ ದಾಖಲಿಸುತ್ತಾರೆ ಎಂದರು.

ಸಮೀಕ್ಷೆಯ ಮಾಹಿತಿಯನ್ನು ಸಾಂಖ್ಯಿಕ ಇಲಾಖೆಯ ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆ ವಿಸ್ತೀರ್ಣ ಎಣಿಕಾ ಕಾರ್ಯದಲ್ಲಿ ಬಳಸಲು ಅನುಮತಿ ನೀಡಲಾಗಿದೆ. ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಬೆಳೆಹಾನಿ ಸಹಾಯಧನ ನೀಡಲು ವರದಿ ತಯಾರಿಸಲು ಬಳಸಲಾಗುವುದು ಎಂದು ಹೇಳಿದರು.

ರೈತರ ಮಕ್ಕಳಿಗೆ ಶಿಷ್ಯವೇತನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ವಹಿಸಿಕೊಂಡ ಮೊದಲ ದಿನವೇ ರೈತರ ಮಕ್ಕಳಿಗಾಗಿ ವಿದ್ಯಾರ್ಥಿವೇತನ ಘೋಷಿಸಿದ್ದರು. ಅಧಿಕೃತವಾಗಿ ಸೆಪ್ಟೆಂಬರ್‌ 5 ರಂದು ಬೆಂಗಳೂರಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಿದ್ದು, ಸಾಂಕೇತಿಕವಾಗಿ ಜಿಲ್ಲೆಯಿಂದ ನಾಲ್ಕು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ನಹೀಂ ಹುಸೇನ್, ರಾಯಚೂರು ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ದೀಪಾ. ಕೃಷಿ ಅಧಿಕಾರಿಗಳಾದ ಸುಧಾ, ಶರಣಮ್ಮ, ಗೀತಾಂಜಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT