ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಮೂಡಿದ ಹರ್ಷ

ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆಗೆ ಅಧಿಸೂಚನೆ
Last Updated 5 ಮೇ 2020, 2:40 IST
ಅಕ್ಷರ ಗಾತ್ರ

ರಾಯಚೂರು: ಪ್ರತ್ಯೇಕ ರಾಯಚೂರು ವಿಶ್ವವಿದ್ಯಾಲಯ ಸ್ಥಾಪಿಸಲು ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿರುವುದರಿಂದ ಶೈಕ್ಷಣಿಕ ವಲಯದಲ್ಲಿ ನಿರೀಕ್ಷೆಗಳು ಗರಿಗೆದರಿದ್ದು, ವಿದ್ಯಾರ್ಥಿಗಳು ಹರ್ಷಗೊಂಡಿದ್ದಾರೆ.

ಸ್ನಾತಕೋತ್ತರ ಕೋರ್ಸ್‌, ಪಿಎಚ್‌ಡಿ ಮಾಡುವುದಕ್ಕೆ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು ಸಿಗಲಿವೆ. ಇದಲ್ಲದೆ ಸ್ಥಳೀಯ ಸಮಸ್ಯೆಗಳ ಕುರಿತು ಸಂಶೋಧನೆ ಕೈಗೊಂಡು ಪರಿಹಾರ ಸೂಚಿಸುವ ಕೇಂದ್ರವೂ ಇದಾಗಲಿದ್ದು, ಈ ಮೂಲಕ ಸಾಕಷ್ಟು ಜನರು ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರಜ್ಞಾವಂತರು ವಿಶ್ಲೇಷಿಸುತ್ತಿದ್ದಾರೆ.

‘ಕೊರೊನಾ ಸಂಕಷ್ಟಮಯ ಸ್ಥಿತಿಯಲ್ಲಿ ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸುವುದು ತಡವಾಗಿದೆ. ನಿರೀಕ್ಷೆಯಂತೆ ಇದೇ ಶೈಕ್ಷಣಿಕ ವರ್ಷದಲ್ಲಿ ರಾಯಚೂರು ವಿಶ್ವವಿದ್ಯಾಲಯ ಕೂಡಾ ಕಾರ್ಯಾರಂಭ ಮಾಡುತ್ತಿದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಯೋಜನ ಸಿಗಲಿದೆ. ಕೂಡಲೇ ಪ್ರತ್ಯೇಕ ಲೋಗೊ ನಿರ್ಮಾಣ ಹಾಗೂ ಇನ್ನಿತರೆ ಶೈಕ್ಷಣಿಕ ಕಾರ್ಯಗಳನ್ನು ಆರಂಭಿಸಲಾಗುವುದು’ ಎಂದು ವಿಶೇಷಾಧಿಕಾರಿ ಡಾ.ಜಿ.ಕೊಟ್ರೇಶ್ವರ ‘ಪ್ರಜಾವಾಣಿ’ಗೆ ತಿಳಿಸಿದರು.

‘ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆಗೆ ಅಧಿಸೂಚನೆ ಹೊರಡಿಸಿದ್ದು ಒಳ್ಳೆಯ ವಿಚಾರ. ಆದರೆ, ಅನುದಾನ ಬಿಡುಗಡೆ ಮಾಡದಿದ್ದರೆ, ಮತ್ತೆ ತೊಂದರೆ ಅನುಭವಿಸಬೇಕಾಗುತ್ತದೆ. ಬ್ಯಾಂಕ್‌ ಖಾತೆಯಲ್ಲಿ ಬ್ಯಾಲನ್ಸ್‌ ಇಲ್ಲದೆ ಏನನ್ನು ಮಾಡುವುದಕ್ಕೆ ಸಾಧ್ಯವಾಗುವುದಿಲ್ಲ. ಇದನ್ನು ಸರ್ಕಾರ ಅರ್ಥ ಮಾಡಿಕೊಂಡು ಅನುದಾನ ಕೊಟ್ಟರೆ, ಇದೇ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಪ್ರಯೋಜನ ಪಡೆಯುವುದಕ್ಕೆ ಸಾಧ್ಯ’ ಎಂದು ಹೈದರಾಬಾದ್‌ ಕರ್ನಾಟಕ ಹೋರಾಟ ಸಮಿತಿಯ ಉಪಾಧ್ಯಕ್ಷ ರಝಾಕ್‌ ಉಸ್ತಾದ್‌ ಹೇಳಿದರು.

‘ರಾಯಚೂರು ಜಿಲ್ಲೆಯೊಂದಿಗೆ ಯಾದಗಿರಿ ಕೂಡಾ ಅಭಿವೃದ್ಧಿ ಆಗಬೇಕಿದೆ. ಯಾದಗಿರಿ ಸಮೀಪದ ಖಾನಾಪುರ ಕ್ಯಾಂಪ್‌ನಲ್ಲಿ ಸ್ನಾತಕೋತ್ತರ ಕೇಂದ್ರ ಆರಂಭಿಸಲು 120 ಎಕರೆ ಜಾಗ ಗುರುತಿಸಿ ಪ್ರಸ್ತಾವನೆಯೊಂದನ್ನು ಕೊಡಲಾಗಿತ್ತು. ಈಗ ಆರಂಭದಲ್ಲೇ ಇದನ್ನು ಕೂಡಾ ಕೈತೆಗೆತ್ತಿಕೊಂಡು ಕ್ಯಾಂಪಸ್ ಅಭಿವೃದ್ಧಿ ಮಾಡಬೇಕು’ ಎಂದರು.

ಮೂರು ವರ್ಷ ವಿಳಂಬ

2016 ರ ಡಿಸೆಂಬರ್‌ ರಾಯಚೂರಿನಲ್ಲಿ ಆಯೋಜಿಸಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದ ಅಂದಿನ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಪ್ರತ್ಯೇಕ ರಾಯಚೂರು ವಿಶ್ವವಿದ್ಯಾಲಯ ಪ್ರಾರಂಭಿಸುವ ಬಗ್ಗೆ ಘೋಷಿಸಿದ್ದರು. 2017–18ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಘೋಷಣೆ ಕೂಡಾ ಮಾಡಿದ್ದರು.

ಆನಂತರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ವಿಶೇಷ ಅಧಿಕಾರಿಯನ್ನು ನೇಮಿಸಲಾಯಿತು. ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತಾದ ಕಡತವನ್ನು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಮರು ಪರಿಶೀಲನೆಗಾಗಿ ಕಡತವನ್ನು ವಾಪಸ್‌ ಕಳುಹಿಸಿದ್ದರು. ಆನಂತರ ಸರ್ಕಾರವು ಸುಗ್ರೀವಾಜ್ಞೆ ಹೊರಡಿಸಿ, ರಾಜ್ಯಪಾಲರ ಅಂಕಿತಕ್ಕೆ ರವಾನಿಸಿತ್ತು. ಕಾನೂನು ತೊಡಕುಗಳು ಇದ್ದ ಕಾರಣ ವಿಶ್ವವಿದ್ಯಾಲಯ ಸ್ಥಾಪನೆ ನನೆಗುದಿಗೆ ಬಿದ್ದಿತ್ತು. ಕಳೆದ ವರ್ಷಾಂತ್ಯ ವಿಶೇಷಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ವಿಶ್ವವಿದ್ಯಾಲಯ ಮಸೂದೆ ತಿದ್ದುಪಡಿ ಕಾಯ್ದೆಗೆ ರಾಜ್ಯಪಾಲರು ಈಚೆಗೆ ಸಹಿ ಹಾಕಿದ್ದು, ಇದರೊಂದಿಗೆ ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆ ಮಾರ್ಗವೂ ಸರಳವಾಯಿತು. ಇದನ್ನು ಆಧರಿಸಿ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT