ರಾಯಚೂರು: ನೂತನ ರಾಯಚೂರು ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ತಿಳಿಸಿದರು.
ನಗರದ ಹೊರವಲಯದ ಗುಲಬರ್ಗಾ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.
ರಾಯಚೂರು ವಿಶ್ವವಿದ್ಯಾಲಯ ಸ್ಥಾಪಿಸಲು ಹೋರಾಟ ಮಾಡಿದ ಎಲ್ಲಾ ಸ್ಥಳೀಯರಿಗೆ, ಶಿಕ್ಷಣ ತಜ್ಞರಿಗೆ, ಸಂಘ ಸಂಸ್ಥೆಗಳ ಮುಖಂಡರಿಗೆ ಕಲ್ಯಾಣ ಕರ್ನಾಟಕ ಜನತೆಗೆ ಅಭಿನಂದಿಸಲಾಗುವುದು ಎಂದು ಹೇಳಿದರು. ಇದೇ ವೇಳೆ ನೂತನ ರಾಯಚೂರು ವಿಶ್ವವಿದ್ಯಾಲಯದ ಜಾಲತಾಣವನ್ನು (ವೆಬ್ಸೈಟ್) ಬಿಡುಗಡೆ ಮಾಡಿದರು.
ರಾಯಚೂರು ವಿಶ್ವವಿದ್ಯಾಲಯದವಿಶೇಷಾಧಿಕಾರಿ ಡಾ.ಜಿ.ಕೊಟ್ರೇಶ್ವರ್ ಮಾತನಾಡಿ, ಈ ಭಾಗದಲ್ಲಿ ಉನ್ನತ ಶಿಕ್ಷಣದ ಕೇಂದ್ರಗಳ ಅಭಿವೃದ್ಧಿಗೆ ಅಗತ್ಯವಿರುವ ಕಾರ್ಯಕಾರಿ ಯೋಜನೆಗಳನ್ನು ರೂಪಿಸಲಾಗುವುದು ಎಂದರು.
ಗುಲಬರ್ಗಾ ವಿವಿಯ ಸಿಂಡಿಕೇಟ್ ಸದಸ್ಯ ಡಾ.ಶರಣಬಸವ ಪಾಟಿಲ ಜೋಳದಡಿಗಿ ಮಾತನಾಡಿ, ಕೋವಿಡ್-19 ಸೊಂಕು ನಿಯಂತ್ರಿಸುವ ಕುರಿತು ಜಾಗ್ರತೆ ಮೂಡಿಸುವ ಕಾರ್ಯ ಅವಶ್ಯಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ರಾಯಚೂರು ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ಪ್ರೊ.ಪಾರ್ವತಿ.ಸಿ.ಎಸ್. ಅಧ್ಯಕ್ಷತೆ ವಹಿಸಿದ್ದರು. ಪ್ರಾಸ್ತಾವಿಕವಾಗಿ ಎನ್.ಎಸ್.ಎಸ್., ಅಧಿಕಾರಿ ಡಾ.ಜಿ.ಎಸ್.ಬಿರಾದಾರ ಮಾತನಾಡಿದರು.
ಉಪನ್ಯಾಸಕ ಅನಿಲ್ ಅಪ್ರಾಳ್ ಪರಿಚಯಿಸಿದರು. ಉಪನ್ಯಾಸಕ ಡಾ.ಶ್ರೀಮಂತ ಸುಧೀರ್ ನಿರೂಪಿಸಿದರು ಹಾಗೂ ಕೃಷ್ಣಾ ವಂದಿಸಿದರು.
ಯರಗೇರಾ ಗ್ರಾಮದ ಕೆಲ ಬಡ ಜನರಿಗೆ ಆಹಾರ ಕಿಟ್ಗಳನ್ನು ವಿತರಿಸಲಾಯಿತು.
ಸಿಂಡಿಕೇಟ್ ಮಾಜಿ ಸದಸ್ಯ ವಿಜಯ ಭಾಸ್ಕರ್, ಐಟಿ ವಿಭಾಗದ ಪ್ರಾಧ್ಯಾಪಕ ಡಾ.ಪಿ.ಭಾಸ್ಕರ್, ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ.ನುಸ್ರತ್ ಫಾತಿಮಾ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ವಾಸುದೇವ್ ಜೇವರ್ಗಿ ಹಾಗೂ ಕೇಂದ್ರದ ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.