ಮಾನ್ವಿ: ತಾಲ್ಲೂಕಿನ ಮುಷ್ಟೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ವಿರೋಧಿಸಿ ಗ್ರಾಮಸ್ಥರು ಕೆಲಹೊತ್ತು ಮತದಾನ ಬಹಿಷ್ಕರಿಸಿದ ಘಟನೆ ಮಂಗಳವಾರ ನಡೆಯಿತು.
ಕಿಡಿಗೇಡಿಗಳು ವಿದ್ಯುತ್ ತಂತಿ ಕತ್ತರಿಸಿದ ಕಾರಣ ಮಂಗಳವಾರ ಗ್ರಾಮದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಖಾಸಗಿ ಕೊಳವೆ ಬಾವಿಯಿಂದ
ಕುಡಿಯುವ ನೀರಿನ ಸರಬರಾಜು ಸ್ಥಗಿತಗೊಂಡಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿತ್ತು. ಸುದ್ದಿ ತಿಳಿಯುತ್ತಲೇ ಗ್ರಾಮಕ್ಕೆ ಆಗಮಿಸಿದ ಪ್ರಭಾರ ಪಿಡಿಒ ಮಹಮ್ಮದ್ ಜುಬೇರ್, ವಿದ್ಯುತ್ ಸಂಪರ್ಕ ಕಲ್ಪಿಸಿ ಕುಡಿಯುವ ನೀರಿನ ಪೂರೈಕೆಗೆ ಕ್ರಮ ಕೈಗೊಂಡರು. ನಂತರ ಗ್ರಾಮಸ್ಥರು ಮತದಾನ ಮಾಡಲು ಸಮ್ಮತಿಸಿದರು.
ಮುಷ್ಟೂರು ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಅಪೂರ್ಣಗೊಂಡಿರುವ ಕುರಿತು ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಮಳೆಗಾಲದಲ್ಲಿ ಕಾಮಗಾರಿ ಆರಂಭಿಸುವುದಾಗಿ ಅಧಿಕಾರಿಗಳು ಕಾಲಹರಣ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದರು. ಆದಷ್ಟು ಬೇಗನೆ ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಮೂಲಕ ನಳಗಳಿಗೆ ಸಂಪರ್ಕ ಕಲ್ಪಿಸಿ ಕುಡಿಯುವ ನೀರು ಪೂರೈಕೆಗೆ ಅವರು ಒತ್ತಾಯಿಸಿದರು.