ಮೆರವಣಿಗೆಯಲ್ಲಿ ನಂದಿಕೋಲು ಕುಣಿತ, ವೀರಗಾಸೆ ನೃತ್ಯ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು. ದೇವಸ್ಥಾನದ ಆವರಣದಲ್ಲಿ ಮಹಿಳೆಯರು ಸೇರಿದಂತೆ ನೂರಾರು ಭಕ್ತರು ಅಗ್ನಿ ಕುಂಡ ಹಾಯ್ದು ಭಕ್ತಿ ಸಮರ್ಪಿಸಿದರು. ಸಂಜೆ ನೂತನ ರಥೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರ ಜಯಘೋಷಗಳ ನಡುವೆ ವೀರಭದ್ರೇಶ್ವರರ ಉತ್ಸವ ಮೂರ್ತಿಯನ್ನು ರಥದ ಮೇಲೆ ಪ್ರತಿಷ್ಠಾಪಿಸಲಾಯಿತು. ಬ್ರಹನ್ಮಠದ ವೀರಭದ್ರಶಿವಾಚಾರ್ಯ ಸ್ವಾಮೀಜಿ, ವಿರಕ್ತಮಠದ ಅಭಿನವ ಮರಿಸಿದ್ದ ಮಹಾಸ್ವಾಮೀಜಿ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು. ನೂರಾರು ಭಕ್ತರು ರಥ ಎಳೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವಿವಿಧ ಮಠಾಧೀಶರು, ಶಾಸಕ ಆರ್. ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು. ಜಾತ್ರೆಗೆ ಬಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ರಥೋತ್ಸವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.