ಸಿರವಾರ: ಕವಿತಾಳದ ಸ್ಲಂ ನಿವಾಸಿಗಳಿಗೆ ವಸತಿ ಸೌಲಭ್ಯ ಹಾಗೂ ಸಂಬಂಧಿಸಿದ ಭೂಮಿ ಹಕ್ಕು ಪತ್ರ ವಿತರಿಸಬೇಕು ಎಂದು ಒತ್ತಾಯಿಸಿ ಕವಿತಾಳ ಪಟ್ಟಣದ ತ್ರಯಂಭಕೇಶ್ವರ ಸ್ಲಂ ನಿವಾಸಿಗಳು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಪಟ್ಟಣದಲ್ಲಿ ಸ್ಲಂ ನಿವಾಸಿಗಳ ಒಕ್ಕೂಟದ ನೇತೃತ್ವದಲ್ಲಿ ‘ನಮ್ಮ ದಲಿತ ಸಮರ ಸೇನೆ‘ ಹಾಗೂ ‘ಕರ್ನಾಟಕ ಸ್ಲಂ ಜನರ ಕ್ರೀಯಾ ವೇದಿಕೆ‘ಯ ಪದಾಧಿಕಾರಿಗಳು ಮತ್ತು ಸ್ಲಂ ನಿವಾಸಿಗಳು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗುತ್ತಾ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಾಜ್ಯ ಸಂಘಟನಾ ಸಂಚಾಲಕ ಎನ್.ತಿಪ್ಪಣ್ಣ ಛಲವಾದಿ ಮಾತನಾಡಿ, ‘ಕವಿತಾಳದ ಕೊಳಚೆ ಪ್ರದೇಶದಲ್ಲಿ 300ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಈ ಕುಟುಂಬಗಳಿಗೆ ಕೂಡಲೇ ವಸತಿ ಸೌಲಭ್ಯ ಹಾಗೂ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.
ಈ ಕುಟುಂಬಗಳಿಗೆ ಮೂಲಸೌಕರ್ಯ ಒದಗಿಸಬೇಕು ಹಾಗೂ ನಿರ್ಗತಿಕರ ವಿಶೇಷ ಘಟಕ ಯೋಜನೆಯಡಿ ಜಮೀನು ಮಂಜೂರು ಮಾಡಿ ಪುನರ್ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ ಇದರ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಸಂಘಟನೆ ವತಿಯಿಂದ ಹೋರಾಟ ಕೈಗೊಳ್ಳಲಾಗುವುದು ಎಂದರು.
ಪ್ರತಿಭಟನಾಕಾರರು ತಹಶೀಲ್ದಾರ್ ವಿಜಯೇಂದ್ರ ಹುಲಿನಾಯಕ ಅವರಿಗೆ ಮನವಿ ಪತ್ರ ಸಲ್ಲಿಸಿ ಕೂಡಲೇ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ಎಸ್.ಗಣೇಶ ಕೊಳಗೇರಿ, ಸ್ಲಂ ಜನರ ಕ್ರೀಯಾ ವೇದಿಕೆಯ ಜಿಲ್ಲಾಧ್ಯಕ್ಷ ನೀಲಕಂಠ, ಮಾನ್ವಿ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಕುಮಾರ, ಕರಿಯಪ್ಪ, ಹನುಮಂತಿ, ನಕ್ಷತ್ರ, ಶಿವಬಸ್ಸಮ್ಮ, ರೇಣುಕಾ ಹಾಗೂ ಹಲವರು ಇದ್ದರು.