ಮಸ್ಕಿ: ’ಪಟ್ಟಣದ ಸೋಮನಾಥ ನಗರದ ಜಲ ಸಂಪನ್ಮೂಲ ಇಲಾಖೆಗೆ ಸೇರಿದ್ದು ಎನ್ನಲಾದ ಸರ್ವೇ ನಂ.223 ಹಾಗೂ 224 ರಲ್ಲಿ 30 ಕ್ಕೂ ಹೆಚ್ಚು ವರ್ಷಗಳಿಂದ ಮನೆ ನಿರ್ಮಿಸಿಕೊಂಡು, ವಾಸ ಮಾಡುತ್ತಿರುವ 400ಕ್ಕೂ ಹೆಚ್ಚು ಕುಟುಂಬಗಳಿಗೆ ಅದೇ ಜಾಗದಲ್ಲಿ ಹಕ್ಕುಪತ್ರ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು‘ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಬುಧವಾರ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಯಾವುದೇ ಕೆಲಸಕ್ಕೆ ಉಪಯೋಗವಾಗದ ಖಾಲಿ ಜಾಗದಲ್ಲಿ ಗ್ರಾಮ ಪಂಚಾಯತಿ ಇದ್ದಾಗಲೇ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸೇರಿದಂತೆ ವಿವಿಧ ವರ್ಗದ ಬಡ ಕೂಲಿ ಕಾರ್ಮಿಕರು ಮನೆ ನಿರ್ಮಿಸಿಕೊಂಡು, ಗುಡಿಸಲು ಹಾಕಿಕೊಂಡು ಜೀವನ ಸಾಗಿಸುತ್ತಿದ್ದಾರೆ.
ಸರ್ಕಾರ ಕೂಡಾ ಈ ನಗರಕ್ಕೆ ಸರ್ಕಾರಿ ಶಾಲೆ, ಚರಂಡಿ, ರಸ್ತೆ ನಿರ್ಮಿಸಿಕೊಟ್ಟಿದೆ. ಇದೀಗ ಪುರಸಭೆಯಾಗಿದ್ದರಿಂದ ಕಳೆದ ಆರು ವರ್ಷಗಳಿಂದ ಯಾವುದೇ ಸೌಲಭ್ಯ ನೀಡುತ್ತಿಲ್ಲ. ಇದರಿಂದ 1500 ಹೆಚ್ಚು ಮತದಾರರು ಸರ್ಕಾರದ ಯಾವುದೇ ಸೌಲಭ್ಯ ದೊರೆಯದೆ ಅತಂತ್ರ ಸ್ಥಿತಿಗೆ ಬಂದಿದ್ದಾರೆ ಎಂದರು.
ಕೂಡಲೇ ಮುಖ್ಯಮಂತ್ರಿ ಹಾಗೂ ಸಚಿವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸೋಮನಾಥ ನಗರದ ನಿವಾಸಿಗಳಿಗೆ ಈಗ ವಾಸವಿರುವ ಸ್ಥಳದಲ್ಲಿಯೇ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ಜೆಡಿಎಸ್ ಮುಖಂಡ ರಾಘವೇಂದ್ರ ನಾಯಕ ಬಳಗಾನೂರು ತಿಳಿಸಿದ್ದಾರೆ.