ರಾಯಚೂರು: ಅಧಿವೇಶದಲ್ಲಿ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿಯನ್ನು ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಎನ್.ಮೂರ್ತಿ ಬಣ) ಸಂಘಟನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ಪರಿಶಿಷ್ಟ್ಟ ಜಾತಿಯ ಶೇ 15 ಪ್ರಮಾಣದ ಮೀಸಲಾತಿ ಸೌಲಭ್ಯವನ್ನು 101 ಜಾತಿಗಳಿಗೂ ಸಮಾನವಾಗಿ ಹಂಚಿಕೆ ಮಾಡುವ ಸಂವಿಧಾನದ ಆಶಯ ಮರೀಚಿಕೆಯಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಕಾಯ್ದೆ 1989ರ ಹೊಸ ಸೆಕ್ಷನ್ 18(ಎ)ರಂತೆ ರಾಜ್ಯ ಸರ್ಕಾರ ಪರಿಣಾಮಕಾರಿಯಾಗಿ ಕಾಯ್ದೆಯನ್ನು ಜಾರಿಗೊಳಿಸಬೇಕು.
ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ನಿಯಂತ್ರಿಸಿ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಅಧಿವೇಶನದಲ್ಲಿ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯನ್ನು ಮಂಡಿಸಿ ಸುಪ್ರೀಂ ಕೋರ್ಟ್ನ ವ್ಯತಿರಿಕ್ತ ಆದೇಶವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಸಂಘಟನೆಯ ವಿಭಾಗೀಯ ಅಧ್ಯಕ್ಷ ಬಸವರಾಜ ಸಾಸಲಮರಿ, ಜಿಲ್ಲಾಧ್ಯಕ್ಷ ಅಶೋಕ ನಂಜಲದಿನ್ನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಬೊಮ್ಮನಾಳ, ಬಸವರಾಜ ನಾಡಂಗಿ, ಎಂ.ಮನೋಹರ, ಬಸವರಾಜ ಕುಣೆಕಲ್ಲೂರು, ಯಲ್ಲಾಲಿಂಗ, ಚಿನ್ನಪ್ಪ, ನಿರುಪಾದೆಪ್ಪ, ಮುಖೇಶ ಇದ್ದರು.