ರಾಯಚೂರು: ನಿಗದಿತ ಕಾಲ ಮಿತಿಯೊಳಗಾಗಿ ಸಕಾಲ ಯೋಜನೆಯಡಿ ಸಲ್ಲಿಸಲಾದ ವಿವಿಧ ಇಲಾಖೆಗಳ ಬಾಕಿ ಇರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸಕಾಲ ಹಾಗೂ ಸಮಗ್ರ ಸಾರ್ವಜನಿಕರ ಕುಂದುಕೊರತೆಗಳ ಪರಿಹಾರ ವ್ಯವಸ್ಥೆ(ಐಪಿಜಿಆರ್ಎಸ್) ಜನಸ್ಪಂದನಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಸಕಾಲ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸಕಾಲ ಯೋಜನೆಯಡಿ ಜನರಿಗೆ ಅನುಕೂಲವಾಗುವಂತೆ ಸೇವೆಗಳನ್ನು ನೀಡಲು ಹಾಗೂ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ವಿಲೇವಾರಿ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸಕಾಲದಡಿ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ವಿಲೇವಾರಿ ಮಾಡುವಲ್ಲಿ ಯಾವುದೇ ವಿಳಂಬ ಮಾಡಬಾರದು, ಬಾಕಿ ಇರುವ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಸೂಕ್ತ ಕಾರಣಗಳಿಲ್ಲದೇ ಅನವಶ್ಯಕವಾಗಿ ಅರ್ಜಿಗಳನ್ನು ತಿರಸ್ಕಾರ ಮಾಡಬಾರದು ಎಂದು ಸೂಚಿಸಿದರು.
ನಗರಸಭೆ, ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆ, ಪಟ್ಟಣ ಪಂಚಾಯತ್, ಸರ್ವೆ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಲ್ಲಿ ಅತಿ ಹೆಚ್ಚಿನ ಸಕಾಲ ಅರ್ಜಿಗಳು ಬಾಕಿ ಇದ್ದು, ಇವುಗಳನ್ನು ಶೀಘ್ರವೇ ವಿಲೇವಾರಿ ಮಾಡಿ ಮುಂದಿನ ಸಭೆಯ ಒಳಗಾಗಿ ವರದಿ ಸಲ್ಲಿಸುವಂತೆ ಅಧಿಖಾರಿಗಳಿಗೆ ಸೂಚಿಸಿದರು.
ಸಕಾಲ ಯೋಜನೆಯ ಕುರಿತು ಹಾಗೂ ಸಕಾಲ ಯೋಜನೆಯ ಸದುಪಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೂಗೊಳ್ಳಬೇಕು. ಆಯಾ ಇಲಾಖೆಯ ಕಚೇರಿಗಳ ಪ್ರದರ್ಶನ ಫಲಕಗಳಲ್ಲಿ ಸಕಾಲ ಯೋಜನೆಯ ಕುರಿತು ಮಾಹಿತಿಯನ್ನು ಪ್ರದರ್ಶಿಸಬೇಕು ಎಂದು ತಿಳಿಸಿದರು.
ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಆಶಪ್ಪ, ಕಾರ್ಮಿಕ ಇಲಾಖೆಯ ಕಾರ್ಮಿಕಾಧಿಕಾರಿ ಆರತಿ, ಅಂಗವಿಕಲರ ಕಲ್ಯಾಣಾಧಿಕಾರಿ ಶರಣಬಸವ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.