ಮುದಗಲ್: ಸಮೀಪದ ಜಕ್ಕೇರಮಡುವು ತಾಂಡಾದ ಪ್ರಾಥಮಿಕ ಶಾಲೆ ಕಟ್ಟಡ ಕಾಮಗಾರಿ ನನೆಗುದಿಗೆ ಬಿದ್ದಿದ್ದು ಮಕ್ಕಳಿಗೆ ತೊಂದರೆಯಾಗುತ್ತಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ₹30 ಲಕ್ಷ ಅನುದಾನದಲ್ಲಿ ಮೂರು ಕೊಠಡಿಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈ ಕೊಠಡಿಗಳ ನಿರ್ಮಾಣ ಜವಾಬ್ದಾರಿಯನ್ನು ನಿರ್ಮಿತಿ ಕೇಂದ್ರಕ್ಕೆ ನೀಡಲಾಗಿದೆ. ಕೆಲಸವನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಇದರಿಂದಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕೊಠಡಿಗಳಿಲ್ಲ.
‘ಇಲ್ಲಿ 1 ರಿಂದ 7ನೇ ತರಗತಿಗಳ 130 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಒಂದೇ ಕೊಠಡಿ ಇದೆ. ಎಲ್ಲ ವಿದ್ಯಾರ್ಥಿಗಳೂ ಒಂದೇ ಕೊಠಡಿಯಲ್ಲಿ ಕುಳಿತು ಅಭ್ಯಾಸ ಮಾಡಬೇಕಾದ ಸ್ಥಿತಿ ಇದೆ. ಕೊಠಡಿ ಕೊರತೆ ಕುರಿತು ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ’ ಎಂದು ಗ್ರಾಮಸ್ಥರು ಆರೋಪಿಸಿದರು.
ಕೊಠಡಿಗಳಿಲ್ಲದ ಕಾರಣ ಅರ್ಧ ಕಾಮಗಾರಿ ಮುಗಿದ ಕೊಠಡಿಯಲ್ಲಿ ನೆಲದ ಮೇಲೆ ಚೀಲ ಹಾಕಿ ಅದರ ಮೇಲೆ ಮಕ್ಕಳನ್ನು ಕೂರಿಸಿ ಪಾಠ ಮಾಡಲಾಗುತ್ತಿದೆ.
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ನನೆಗುದಿಗೆ ಬಿದ್ದ ಶಾಲಾ ಕೊಠಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಅಮರೇಶ ನಾಯಕ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಾನಪ್ಪ ಹಾಗೂ ಗ್ರಾಮಸ್ಥ ರವಿಕುಮಾರ ರಾಠೋಡ ಒತ್ತಾಯಿಸಿದ್ದಾರೆ.