ರಾಯಚೂರು: ಕೊರೊನಾ ಪ್ರಕರಣಗಳು ವೇಗವಾಗಿ ಹರಡುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರಾಧ್ಯಾಪಕರ ಆರೋಗ್ಯ ದೃಷ್ಟಿಯಿಂದ ಯುಜಿ, ಪಿಜಿ, ಕಾನೂನು, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್ ಪರೀಕ್ಷೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಜನ ಸಾಮಾನ್ಯರು, ವಿದ್ಯಾರ್ಥಿಗಳು ಹಲವಾರು ಸಮಸ್ಯೆಗಳಿಗೆ ಗುರಿಯಾಗಿದ್ದು ಸರ್ಕಾರ ವಿದ್ಯಾರ್ಥಿಗಳ ನೆರವಿಗೆ ಬಾರದೇ ವಿರೋಧ ನೀತಿ ಅನುಸರಿಸುತ್ತಿದೆ ಎಂದು ದೂರಿದರು.
ಕೂಡಲೇ ಆರು ತಿಂಗಳು ಎಲ್ಲಾ ಪ್ರವೇಶ, ಪರೀಕ್ಷಾ ಶುಲ್ಕ ಸೇರಿದಂತೆ ವಿವಿಧ ಶುಲ್ಕ ಮನ್ನಾ ಮಾಡಬೇಕು. ಪಿಯುಸಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಬೇಕು. ಲಾಕ್ಡೌನ್ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿ ಕುಟುಂಬಗಳಿಗೆ ಆರು ತಿಂಗಳು ಮಾಸಿಕ ₹7,500 ವೇತನ ನೀಡಬೇಕು.
ಆನ್ ಲೈನ್ ಶಿಕ್ಷಣ, ಡಿಜಿಟಲ್ ಡಿವೈಡ್ ತಡೆಯಬೇಕು. ತಳ ಸಮುದಾಯಗಳ ಹಿನ್ನೆಲೆಯಲ್ಲಿ ಬರುವ ವಿದ್ಯಾರ್ಥಿಗಳ ಶಿಕ್ಷಣ ಮುಂದುವರೆಸಲು ಫೆಲೋಶಿಪ್ ಶೀಘ್ರವಾಗಿ ನೀಡಬೇಕು. ಎಲ್ಲಾ ವಿಶ್ವವಿದ್ಯಾಲಯಗಳ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಶಿಕ್ಷಕರ, ಉಪನ್ಯಾಸಕರ ಕಾರ್ಮಿಕರ ಬಾಕಿ ವೇತನ ಪಾವತಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ವೀರಾಪುರ, ಉಪಾಧ್ಯಕ್ಷ ದಿಲ್ ಶಾದ್ , ಕಾಸಿಂಬಿ, ಉಮೇಶ ನಾಯಕ, ಕೆ.ಜಿ.ವೀರೇಶ, ಭೀಮನಗೌಡ, ಮಹಾಲಿಂಗಮ್ಮ ಇದ್ದರು.