ರಾಯಚೂರು: ಕ್ರೀಡಾ ಚಟುವಟಿಕೆಗಳು ವ್ಯಕ್ತಿಗಳನ್ನು ಕ್ರಿಯಾಶೀಲರನ್ನಾಗಿಸುತ್ತವೆ. ಎಲ್ಲರೂ ಯೋಗ, ವ್ಯಾಯಾಮದಂತಹ ಕ್ರೀಡಾ ಚಟುವಟಿಕೆ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಸಲಹೆ ನೀಡಿದರು.
ನಗರದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರಿನ ಕರ್ನಾಟಕ ಕೀಡಾ ಪ್ರಾಧಿಕಾರದಿಂದ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಓದುವ ಅಭ್ಯಾಸದ ಜೊತೆಗೆ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಉತ್ತಮ ಆರೋಗ್ಯ ಹೊಂದಬಹುದಾಗಿದೆ. ಗ್ರಾಮೀಣ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಪ್ರತಿಭೆ ಗುರುತಿಸಿಕೊಂಡು ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ.ವೇದಮೂರ್ತಿ ಮಾತನಾಡಿ, ದೇಶದ ಯುವ ಜನಾಂಗ ಉತ್ಸಾಹದಿಂದ ಕ್ರೀಡೆಯಲ್ಲಿ ತೊಡಗಿಸಿಕೊಂಡು ಕೀರ್ತಿ ತರಬೇಕು. ಸರ್ಕಾರಗಳು ಕ್ರೀಡೆಗೆ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತಿದ್ದು, ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕ್ರೀಡೆಯಲ್ಲಿ ಸೋಲು, ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯವಾಗಿದ್ದು, ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಸಸಿ ವಿತರಣೆ ಮಾಡಲಾಗುತ್ತದೆ. ಅವುಗಳನ್ನು ನೆಟ್ಟು ಪೋಷಣೆ ಮಾಡಬೇಕು. ಮೊದಲ ಎರಡು ಸ್ಥಾನಗಳು ಪಡೆದವರಗೆ ವೈಯಕ್ತಿವಾಗಿ ತಲಾ ₹3 ಸಾವಿರ ನೀಡಲಾಗುವುದು ಎಂದು ಘೋಷಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ಪ್ರತಿಭೆ ಅಡಗಿರುತ್ತದೆ. ಅದನ್ನು ಹೊರತರಲು ಇಂತಹ ಕ್ರೀಡಾಕೂಟಗಳು ವೇದಿಕೆಯಾಗಿವೆ. ಕ್ರೀಡಾಪಟುಗಳು ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆದು ದೇಶಕ್ಕೆ ಹೆಸರು ತರಬೇಕು ಎಂದು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ, ಜಿಲ್ಲಾ ಹಾಕಿ ತರಬೇತುದಾರ ರಾಮಚಂದ್ರ, ನರಸಿಂಹ ನಾಯಕ ಇದ್ದರು.