ರಾಯಚೂರು: ಜೂನ್ 25 ರಿಂದ ಜರುಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ರೀತಿಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಹಾಗೂ ಪರೀಕ್ಷಾ ಕೇಂದ್ರಗಳಿಗೆ ಡಿಸ್ಇನ್ಫೆಕ್ಟಡ್ ಔಷಧಿಯನ್ನು ಸಿಂಪಡಿಸುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ. ಪರೀಕ್ಷೆ ಸಿದ್ದತೆಗಳ ಕುರಿತು ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕು ಅಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಮಾತನಾಡಿದರು.
ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಲ್ಲಿ ಸ್ಥಾಪಿಸಲಾದ ಒಟ್ಟು 77 ಪರಿಕ್ಷಾ ಕೇಂದ್ರಗಳ ಎಲ್ಲ ಕೊಠಡಿಗಳಿಗೆ ಡಿಸ್ಇನ್ಫೆಕ್ಟೆಡ್ ದ್ರಾವಣ ಸಿಂಪಡಿಸಲು ಕ್ರಮ ಕೈಗೊಳ್ಳಬೇಕು. ಪರೀಕ್ಷೆ ಬರೆಯುವ ಪ್ರತಿಯೊಂದು ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಮುಗಿಯುವವರೆಗೂ ಪ್ರತಿನಿತ್ಯ ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೇಷನ್ ನೀಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗೂ ಥರ್ಮಲ್ ಸ್ಕ್ಯಾನರ್ನಿಂದ ತಪಾಸಣೆಗೆ ಮಾಡಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಮಕ್ಕಳು ಮಾಸ್ಕ್ ಧರಿಸಿ ಪರೀಕ್ಷೆ ಕೇಂದ್ರವನ್ನು ಪ್ರವೇಶಿಸಬೇಕು. ಕಡ್ಡಾಯವಾಗಿ ಅಂತರ ಕಾಯ್ದುಕೊಳ್ಳಬೇಕು. ಪ್ರತಿ ಕೋಣೆಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಬೇಕು. ಕಂಟೈನ್ಮೆಂಟ್ ವಲಯದಲ್ಲಿರುವ ಮಕ್ಕಳಿಗೆ ಪರೀಕ್ಷೆ ಸಮಯದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಎನ್-95 ಮಾಸ್ಕ್ಗಳನ್ನು ವಿತರಿಸಬೇಕು ಹಾಗೂ ಪ್ರತ್ಯೇಕ ಕೊಠಡಿಗಳಲ್ಲಿ ಬರೆಯಲು ವ್ಯವಸ್ಥೆ ಮಾಡಲು ತಿಳಿಸಿದರು.
ಕುಡಿಯುವ ನೀರನ್ನು ಮಕ್ಕಳೇ ತರಬೇಕು. ಪೆನ್, ಕಂಪಾಸ್ ಪೆಟ್ಟಿಗೆಯಂತಹ ಇತರ ಸಾಮಗ್ರಿಗಳನ್ನು ಬೇರೆಯವರಿಂದ ಪಡೆಯುವಂತಿಲ್ಲ ಎಂದು ತಿಳಿಸಿದರು.
ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶಿಸುವಾಗ, ಮರಳಿ ಹೋಗುವಾಗ ಅಂತರ ಕಾಯ್ದುಕೊಳ್ಳಬೇಕು. ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಂದ ಜಿಲ್ಲಾ ಸ್ಟ್ರಾಂಗ್ ರೊಂಗಳಿಗೆ ಪಶ್ನೆ ಪತ್ರಿಕೆ, ಉತ್ತರ ಪತ್ರಿಕೆಗಳ ಸಾಗಾಣಿಕೆಗೆ ಸೂಕ್ತ ಭದ್ರತೆಯನ್ನು ಒದಗಿಸಲಾಗುತ್ತದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144 ಸಿ.ಆರ್.ಪಿ.ಸಿ ಕಲಂ ನಿಷೇಧಾಜ್ಞೆ ಜಾರಿಮಾಡಲಾಗುವುದು. ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಆದೇಶಿಸುವುದಾಗಿ ತಿಳಿಸಿದರು.
ಪರೀಕ್ಷೆ ಬಗ್ಗೆ ಪಾಲಕರು ಮತ್ತು ಸಾರ್ವಜನಿಕರಲ್ಲಿ ಇರುವ ಆತಂಕವನ್ನು ದೂರ ಮಾಡಿ ವ್ಯವಸ್ಥಿತವಾಗಿ ನಡೆಸಬೇಕು. ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಪಾಲಕರು ಮಕ್ಕಳನ್ನು ಪರೀಕ್ಷೆಗಳಿಗೆ ಕಳುಹಿಸಲು ಹಿಂದೇಟು ಹಾಕಬಾರದು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗೋನಾಳ ಪರೀಕ್ಷಾ ಸಿದ್ದತೆ ಬಗ್ಗೆ ವಿವರಿಸುತ್ತಾ, ಜಿಲ್ಲೆಯಲ್ಲಿ 77 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 25,750 ಶಾಲಾ ಅಭ್ಯರ್ಥಿಗಳು, 4,663 ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳು ಸೇರಿ ಒಟ್ಟು 30,413 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀಹರಿಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ, ಸಹಾಯಕ ಆಯುಕ್ತ ಸಂತೋಷ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ರಾಮಕೃಷ್ಣ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.