ಮಂಗಳವಾರ, ಮಾರ್ಚ್ 28, 2023
30 °C
ಶಿಕ್ಷಣಾಧಿಕಾರಿಗಳಿಗೆ ಶಾಸಕ ಬಸನಗೌಡ ದದ್ದಲ ಸಲಹೆ

ಎಸ್ಸೆಸ್ಸೆಲ್ಸಿ ಪರೀಕ್ಷೆಯಂದು ಬಸ್‌ ವ್ಯವಸ್ಥೆ ಮಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಗ್ರಾಮೀಣ ಭಾಗಗಳಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವುದಕ್ಕೆ ಬರುವ ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಶಾಸಕ ಬಸನಗೌಡ ದದ್ದಲ ಸಲಹೆ ನೀಡಿದರು.

ನಗರದ ವಿದ್ಯಾಭಾರತಿ ಶಾಲೆಯಲ್ಲಿ ಭಾನುವಾರ ಆಯೋಜಿಸಿದ್ದ ರಾಯಚೂರು ತಾಲ್ಲೂಕು ಮಟ್ಟದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಪೂರ್ವ ಸಿದ್ಧತೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ನಿರ್ಲಕ್ಷ್ಯ ತೋರಿಸದೆ ಅಧ್ಯಯನ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು. ಎಲ್ಲರನ್ನು ತೇರ್ಗಡೆ ಮಾಡುತ್ತಾರೆ ಎಂದು ನಿರ್ಲಕ್ಷ್ಯ ವಹಿಸಬಾರದು. ಪರೀಕ್ಷಾ ಕೇಂದ್ರದಲ್ಲಿ ಕೋವಿಡ್‌ ತಡೆಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದರು.

ಶಾಸಕ ಡಾ.ಶಿವರಾಜ ಪಾಟೀಲ ಸೂಚನೆ ಮಾತನಾಡಿ, ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉನ್ನತ ಶಿಕ್ಷಣಕ್ಕೆ ಹೋಗಲು ಪ್ರಮುಖ ಘಟ್ಟ ಇದಾಗಿದೆ. ಸರ್ಕಾರವು ಪಿಯು ಪರೀಕ್ಷೆಗಳನ್ನು ರದ್ದುಗೊಳಿಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಕೈಗೊಂಡಿದೆ. ಈ ನಿರ್ಧಾರದ ಹಿಂದೆ ಸೂಕ್ತ ಕಾರಣ ಇರುತ್ತದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ ಮಾತನಾಡಿ, ತಾಲ್ಲೂಕಿನಲ್ಲಿ ಒಟ್ಟು 60 ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಮಾಡಲಾಗಿದ್ದು, ಒಟ್ಟು 9,617 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಒಂದು ಬೆಂಚ್‌ಗೆ ಒಬ್ಬ ವಿದ್ಯಾರ್ಥಿ ಪರೀಕ್ಷೆ ಬರೆಯಲಿದ್ದಾರೆ ಎಂದರು.

ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಎಂ.ವೃಷಬೇಂದ್ರಯ್ಯ ಮಾತನಾಡಿ, ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಮುಂಚಿತವಾಗಿಯೇ ಸ್ಥಳ ಮಾಹಿತಿ ನೀಡಬೇಕು. ಪ್ರತಿಯೊಬ್ಬ ಶಿಕ್ಷಕರು ಕಡ್ಡಾಯವಾಗಿ ಲಸಿಕೆ ಪಡೆದಿರುವುದನ್ನು ಖಚಿತ ಮಾಡಿಕೊಳ್ಳಲಾಗಿದೆ. ಒಂದು ತಿಂಗಳಿಂದ ಪೂರ್ವಸಿದ್ಧತೆಯನ್ನು ಹಂತಹಂತವಾಗಿ ಪರಿಶೀಲಿಸುವ ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.

ಸಿಂಗನೋಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಬಸಪ್ಪ ಗದ್ದಿ ಅವರು ಈಗಾಗಲೇ ಮಾಡಿಕೊಂಡ ಸಿದ್ಧತೆ ಕುರಿತು ಮಾತನಾಡಿ, ಸರ್ಕಾರದ ಮಾರ್ಗಸೂಚಿ ಅನುಸಾರ ಪರೀಕ್ಷಾ ಕೇಂದ್ರದಲ್ಲಿ ಸ್ವಚ್ಚತೆ ಕಾರ್ಯ ಕೈಗೊಳ್ಳಲಾಗಿದೆ. ಈಗ ಕೊಟ್ಟಿರುವ ಎರಡು ಸ್ಯಾಬಿಟೈಜರ್ ಸಾಕಾಗುವುದಿಲ್ಲ. ಮತ್ತಷ್ಟು ಸ್ಯಾಬಿಟೈಜರ್ ಒದಗಿಸಿ, ಕೋಣೆಗಳ ಸ್ಯಾನಿಟೈಜೇಷನ್ ಮಾಡುವುದಕ್ಕೆ ಬರುತ್ತಿಲ್ಲ. ಯಾವುದೇ ಮಕ್ಕಳಿಗೆ ತೊಂದರೆಯಾಗದ ರೀತಿಯಲ್ಲಿ ಎಲ್ಲಾ ಮಕ್ಕಳು ಪರೀಕ್ಷೆ ಬರೆಯುವ ರೀತಿಯಲ್ಲಿ ವ್ಯವಸ್ಥೆ ಮಾಡುವ ಜವಾಬ್ದಾರಿ ಮುಖ್ಯಸ್ಥರ ಮೇಲಿದೆ ಎಂದು ಹೇಳಿದರು.

ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೈ.ಗೋಪಾಲರೆಡ್ಡಿ, ತಹಶೀಲ್ದಾರ್ ಡಾ.ಹಂಪಣ್ಣ ಸಜ್ಜನ್, ತಾಲ್ಲೂಕು ಪಂಚಾಯಿತಿ ಇಒ ರಾಮರೆಡ್ಡಿ, ರಾಯುಕ್ತ ವೆಂಕಟೇಶ, ಸಾರಿಗೆ ಸಂಸ್ಥೆ ಡಿಪೋ ವ್ಯವಸ್ಥಾಪಕ ಪ್ರದೀಪ, ತಾಲ್ಲೂಕು ವೈದ್ಯಾಧಿಕಾರಿ ಡಾ.ಶಕೀರ್‌, ಆಗ್ನಿಶಾಮಕ ಠಾಣೆ ಅಕಾರಿ ರವೀಂದ್ರ, ಸ್ಕೌಟ್ಸ್ ಮತ್ತು ಗೈಡ್ಸ್‌ನ ಅಜೀಜಾ ಸುಲ್ತಾನಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.