ರಾಯಚೂರು: ಜಿಲ್ಲೆಯಾದ್ಯಂತ ಜೂನ್ 25 ರಿಂದ ಆರಂಭವಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಯಶಸ್ವಿಯಾಗಿ ಶುಕ್ರವಾರ ಮುಕ್ತಾಯವಾಗಿವೆ.
ಕೊನೆಯ ದಿನದಂದು ನಡೆದ ತೃತೀಯ ಭಾಷಾ ವಿಷಯದ ಪರೀಕ್ಷೆಗೆ ಒಟ್ಟು 26,869 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಆದರೆ, 25,574 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 1,295 ವಿದ್ಯಾರ್ಥಿಗಳು ಗೈರುಹಾಜರಿಯಾಗಿದ್ದಾರೆ.
ಜಿಲ್ಲೆಯಾದ್ಯಂತ ಎಲ್ಲ 83 ಪರೀಕ್ಷಾ ಕೇಂದ್ರಗಳಲ್ಲಿಯೂ ಕೊರೊನಾ ಸೋಂಕು ಹರಡದಂತೆ ಸಾಕಷ್ಟು ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಲಾಗಿತ್ತು. ಎಲ್ಲರಿಗೂ ಆರಂಭದಲ್ಲಿಯೇ ಮಾಸ್ಕ್ ವಿತರಿಸಿದ್ದಲ್ಲದೆ, ಸ್ಯಾನಿಟೈಜರ್ ನೀಡಲಾಗಿತ್ತು. ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಪ್ರತಿಯೊಬ್ಬರ ಥರ್ಮಲ್ ತಪಾಸಣೆ ಕೈಗೊಳ್ಳಲಾಗಿತ್ತು. ಆರಂಭದಲ್ಲಿ ವಿದ್ಯಾರ್ಥಿಗಳಲ್ಲಿ ಹಾಗೂ ಪಾಲಕರಲ್ಲಿ ಸ್ವಲ್ಪ ಆತಂಕವು ಕಂಡುಬಂದಿತ್ತು. ಆದರೆ, ಪರೀಕ್ಷಾ ವ್ಯವಸ್ಥೆಯನ್ನು ನೋಡಿದ ವಿದ್ಯಾರ್ಥಿಗಳು, ಪರೀಕ್ಷೆ ಬರೆಯುವುದಕ್ಕೆ ಉತ್ಸಾಹ ಉಳಿಸಿಕೊಂಡಿದ್ದರು.
ಪ್ರತಿ ವಿದ್ಯಾರ್ಥಿಯು ಪರೀಕ್ಷಾ ಕೇಂದ್ರಗಳಿಗೆ ಸುಗಮವಾಗಿ ತಲುಪುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪೂರ್ವದಲ್ಲಿಯೇ ಯೋಜನೆ ಮಾಡಲಾಗಿತ್ತು. 292 ಸರ್ಕಾರಿ ಬಸ್ಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಎಲ್ಲಿಯೂ ಅಹಿತಕರ ಘಟನೆಗಳು ವರದಿಯಾಗಿಲ್ಲ.
ರಾಯಚೂರಿನ ಪ್ರೌಢಶಾಲೆಯಲ್ಲಿ ಓದುತ್ತಿದ್ದ ನೆರೆಯ ತೆಲಂಗಾಣ ಮತ್ತು ಆಂಧಪ್ರದೇಶ ರಾಜ್ಯದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ಕೇಂದ್ರ ಮಾಡಲಾಗಿತ್ತು. ಪರೀಕ್ಷೆ ಆರಂಭ ಪೂರ್ವದಲ್ಲಿಯೇ ಎಲ್ಲರದ್ದು ಗಂಟಲು ದ್ರವ ಮಾದರಿಗಳನ್ನು ಪಡೆದು ಕೋವಿಡ್ ಪರೀಕ್ಷೆ ಕೈಗೊಳ್ಳಲಾಗಿತ್ತು.
ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಲಕ್ಷ್ಮೀಕಾಂತರೆಡ್ಡಿ ಹಾಗೂ ಡಿಡಿಪಿಐ ಬಿ.ಎಚ್. ಗೋನಾಳ ಅವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ವ್ಯವಸ್ಥೆಯನ್ನು ಪರಿಶೀಲಿಸುತ್ತಾ ಬಂದಿದ್ದರು. ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯಿಂದ ಆಶಾ ಕಾರ್ಯಕರ್ತೆಯರು, ದಾದಿಯರನ್ನು ನಿಯೋಜಿಸಲಾಗಿತ್ತು. ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು. ಎಲ್ಲಿಯೂ ಜನದಟ್ಟಣೆ ಆಗದಂತೆ ಕ್ರಮ ವಹಿಸಿದ್ದರು.