ರಾಯಚೂರು: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಹಿರಿಯ ನಾಗರಿಕರು ಸರ್ಕಾರ ನೀಡುತ್ತಿರುವ ಕೋವಿಡ್ ಲಸಿಕೆಯನ್ನು ಸ್ವಯಂಪ್ರೇರಿತರಾಗಿ ಪಡೆದು ಕೋವಿಡ್ನಿಂದ ರಕ್ಷಿಸಿಕೊಳ್ಳಬೇಕು ಎಂದು ನಗರಸಭೆ ಸದಸ್ಯ ಶರಣಬಸವ ಬಲ್ಲಟಗಿ ಸಲಹೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ವಾರ್ಡ್ ನಂಬರ್ 5ರಲ್ಲಿ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಕೋವಿಡ್ ವ್ಯಾಕ್ಸಿನೇಷನ್ ಹಾಗೂ ಗಂಟಲು ದ್ರುವ ಪರೀಕ್ಷೆ ಶಿಬಿರಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ವೆಂಕಟೇಶ ಮಾತನಾಡಿ, ಕೋವಿಡ್ ನಿಯಂತ್ರಣಕ್ಕೆ ಹಿರಿಯ ನಾಗರಿಕರು ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕು. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಆತಂಕಕ್ಕೆ ಒಳಗಾಗದೇ ಲಸಿಕೆ ಹಾಕಿಕೊಳ್ಳಬೇಕು. ರೋಗ ಲಕ್ಷಣಗಳಿದ್ದವರು ತಪಾಸಣೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಡಾ. ಸುರೇಶ ಸಗರದ, ನರೇಶ ಕರಟೂರು, ಶರಣಗೌಡ ಇಟಗಿ, ಲಲಿತಾ, ಲಯನ್ಸ್ ಕ್ಲಬ್ ಪದಾಧಿಕಾರಿಗಳು ಇದ್ದರು.