ಲಿಂಗಸುಗೂರು: ಕೊರೋನಾ ವೈರಸ್ ಹರಡದಂತೆ ಜಿಲ್ಲಾ ಮತ್ತು ತಾಲ್ಲೂಕು ಆಡಳಿತ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಿದ್ದೇವೆ. ಅನಗತ್ಯ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಉಪ ವಿಭಾಗಾಧಿಕಾರಿ ರಾಜಶೇಖರ ಡಂಬಳ ಅವರಿಗೆ ಮನವಿ ಸಲ್ಲಿಸಿದ ಅವರು, ತಾವುಗಳು ಗ್ರಾಮೀಣ ಮಟ್ಟದಲ್ಲಿ ಜನಜಾಗೃತಿ, ರಾಸಾಯನಿಕ ದ್ರಾವಣ ಸಿಂಪಡಣೆ, ಕ್ವಾರಂಟೈನ್ ಕೇಂದ್ರಗಳ ನಿರ್ವಹಣೆ ಸೇರಿದಂತೆ ಅಧಿಕಾರಿಗಳ ನಿರ್ದೇಶನಗಳ ಮೇರೆಗೆ ಕ್ರಿಯಾಶೀಲವಾಗಿ ಸಾಕಷ್ಟು ಕೆಲಸ ಕಾರ್ಯ ಮಾಡಿಕೊಂಡು ಬಂದಿದ್ದೇವೆ ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳುವುದು, ಸೆನಿಟೈಸರ್ ಬಳಕೆ, ಕ್ವಾರಂಟೈನ್ ಕೇಂದ್ರಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಹಗಲಿರಳು ಶ್ರಮಿಸುತ್ತ ಬಂದಿದ್ದೇವೆ. ಈ ಎಲ್ಲಾ ಕೆಲಸ ಕಾರ್ಯಗಳಿಗೆ ಸಾಕಷ್ಟು ಹಣ ಖರ್ಚು ಮಾಡಿಕೊಂಡಿದ್ದು ತಾಲ್ಲೂಕು ಆಡಳಿತ ಕೂಡಲೆ ಆ ಹಣವನ್ನು ಪಾವತಿಸಬೇಕು ಎಂದು ಒತ್ತಾಯಿಸಿದರು.