ರಾಯಚೂರು: ರಾಜ್ಯದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕ ಸದಸ್ಯರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಮೂರು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದ್ದು, ಸರ್ಕಾರಕ್ಕೆ ಮನವಿ ಕೂಡ ಸಲ್ಲಿಸಲಾಗಿದೆ. ಆದರೆ, ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಮದ್ಯ ಸೇವಿಸುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಇದರಿಂದ ಬಡಕುಟುಂಬಗಳು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಸಂವಿಧಾನದ ಅನುಚ್ಛೇದ 47ರ ಪ್ರಕಾರ ಮದ್ಯ ಮಾರಾಟ ನಿಷೇಧಿಸಬೇಕು ಎಂಬ ಆದೇಶವಿದ್ದು, ಮದ್ಯ ವ್ಯಸನಕ್ಕೆ ಜನರನ್ನು ಬಲಿಯಾಗಿಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.
ಎಂಟು ವರ್ಷಗಳಲ್ಲಿ ಅಬಕಾರಿ ಇಲಾಖೆಯ ಆದಾಯ ₹ 9 ಸಾವಿರ ಕೋಟಿಯಿಂದ ₹ 20 ಸಾವಿರ ಕೋಟಿಗೆ ಏರಿಕೆಯಾಗಿರುವುದ್ದು ಗ್ರಾಮೀಣ ಪ್ರದೇಶದಲ್ಲಿ ಅಕ್ರಮವಾಗಿ ಮಾರಾಟ ಮಾಡುವುದರಿಂದ ರಾಜ್ಯದಲ್ಲಿ ಯುವಕರು ಕೂಡ ಮದ್ಯ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ ಎಂದು ದೂರಿದರು.
ಎಲ್ಲ ಜಾತಿಯವರನ್ನು ಒಳಗೊಂಡ ಸಾಮಾಜಿಕ ನ್ಯಾಯ ಸಮಿತಿಯನ್ನು ಎಲ್ಲ ಗ್ರಾಮಗಳಲ್ಲಿ ರಚನೆ ಮಾಡಬೇಕು. ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.