ರಾಯಚೂರು: ಮಾನ್ವಿ ತಾಲ್ಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಅಲ್ಪ ಸಂಖ್ಯಾತರ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಗಳಿಗೆ ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯರು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಮಾನ್ವಿಯಲ್ಲಿರುವ ವಸತಿ ನಿಲಯಗಳಿಗೆ ಹೋಗಲು ಸರಿಯಾದ ರಸ್ತೆಗಳೇ ಇಲ್ಲವಾಗಿದ್ದು, ರಸ್ತೆಗಳನ್ನು ನಿರ್ಮಾಣ ಮಾಡಬೇಕು. ವಿದ್ಯುತ್ ಸಂಪರ್ಕ ಒದಗಿಸಬೇಕು. ಜನರೇಟರ್ ವ್ಯವಸ್ಥೆಯೂ ಮಾಡಬೇಕು. ಶುದ್ಧ ಕುಡಿಯುವ ನೀರು ಕಲ್ಪಿಸಬೇಕು. ಅಂಬೇಡ್ಕರ್ ವಸತಿ ನಿಲಯದ ಮೇಲ್ವಿಚಾರಕರು ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಸೌಕರ್ಯದ ಬಗ್ಗೆ ಕೇಳಿದರೂ ಉಡಾಫೆಯಾಗಿ ಉತ್ತರಿಸುತ್ತಾರೆ. ಅವರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು.
ವಸತಿ ನಿಲಯಗಳ ಮೈದಾನದಲ್ಲಿ ಶುದ್ಧವಾದ ವಾತಾವರಣ ನಿರ್ಮಾಣ ಮಾಡಬೇಕು. ನಿಲಯಗಳಿಗೆ ತಡೆಗೋಡೆ ನಿರ್ಮಿಸಬೇಕು. ಕಾವಲುಗಾರರನ್ನು ನೇಮಿಸಬೇಕು. ಅಡುಗೆ ಮಾಡಲು ಎಲ್ಪಿಸಿ ಬಳಸಲು ಸೂಚಿಸಬೇಕು. ಸಂಚಾರಿ ಬಸ್ ಸೌಕರ್ಯ, ಪಠ್ಯ ಪುಸ್ತಕಗಳನ್ನು ಒದಗಿಸಬೇಕು ಎಂದರು.
ದಿನಗೂಲಿಗಳಾಗಿ ದುಡಿಯುತ್ತಿರುವ ಕಾರ್ಮಿಕರನ್ನು ಕಾಯಂಗೊಳಿಸಬೇಕು. ವಸತಿ ನಿಲಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡಬೇಕು. ವಸತಿ ನಿಲಯಗಳ ಸಂಖ್ಯೆಗೆ ಅನುಗುಣವಾಗಿ ಮೇಲ್ವಿಚಾರಕರ ನೇಮಕ ಮಾಡಬೇಕು. ವಸತಿನಿಲಯಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸಬೇಕು ಎಂದು ಆಗ್ರಹಿಸಿದರು.