ರಾಯಚೂರು: ಪರಿಶಿಷ್ಟ ಪಂಗಡದ ಮೀಸಲಾತಿ ಶೇ 7.5ಕ್ಕೆ ಹೆಚ್ಚಿಸಬೇಕು. ಸಮುದಾಯದ ನಾಯಕ ಬಿ.ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಾಗುತ್ತದೆ ಎಂದು ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ಮುಖಂಡ ರಘುವೀರ ನಾಯಕ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಭರವಸೆ ನೀಡಿ ಪರಿಶಿಷ್ಟ ಪಂಗಡದ ಮತಗಳನ್ನು ಪಡೆದುಕೊಂಡು, ಅಧಿಕಾರಕ್ಕೆ ಬಂದ ನಂತರ ಭರವಸೆ ಈಡೇರಿಸದೇ ಅನ್ಯಾಯ ಮಾಡಲಾಗಿದೆ ಎಂದು ದೂರಿದರು.
ಪ್ರಸನ್ನಾನಂದ ಪುರ ಸ್ವಾಮೀಜಿ ಸಾನಿಧ್ಯದಲ್ಲಿ ರಾಜನಹಳ್ಳಿಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಿದಾಗ ಮೈತ್ರಿ ಸರ್ಕಾರ ನಾಗಮೋಹನದಾಸ್ ಆಯೋಗವನ್ನು ರಚನೆ ಮಾಡಿದೆ. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಹೆಚ್ಚಳ ಮಾಡಲಾಗುವುದೆಂದು ಸಮುದಾಯದ ಸಮಾವೇಶದಲ್ಲಿ ಘೋಷಣೆ ಮಾಡಿದ ಬಿಜೆಪಿ ನಾಯಕರು ಈಗ ಅಧಿಕಾರಕ್ಕೆ ಬಂದು ತಿಂಗಳು ಕಳೆದರೂ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ವಿರುದ್ಧ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಯಾರೂ ಮುಂದೆ ಬರದಾಗ ಶ್ರೀರಾಮುಲು ಸ್ಪರ್ಧೆ ಮಾಡಿದ್ದರು. ಚುನಾವಣೆಯಲ್ಲಿ ಬಳಸಿಕೊಂಡು ಅಧಿಕಾರಕ್ಕೆ ಬಂದ ಬಳಿಕ ನಿರ್ಲಕ್ಷ್ಯ ಮಾಡಲಾಗಿದೆ. ಉಪಮುಖ್ಯಮಂತ್ರಿ ಮಾಡಿಲ್ಲ. ಪ್ರಮುಖ ಖಾತೆಯೂ ನೀಡಿಲ್ಲ. ಸಮುದಾಯಕ್ಕೆ ನ್ಯಾಯ ದೊರಕಿಸದಿದ್ದರೆ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟಕ್ಕೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ವೈ.ಹನುಮಂತಪ್ಪ ನಾಯಕ, ಕರಿಯಪ್ಪ ನಾಯಕ, ರಾಮಕೃಷ್ಣನಾಯಕ, ರಮೇಶ ನಾಯಕ, ವೀರೇಶ ನಾಯಕ ಪತ್ರಿಕಾಗೋಷ್ಠಿಯಲ್ಲಿ ಇದ್ದರು.