ರಾಯಚೂರು: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಒಳಪಡುವ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಸದಸ್ಯರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು.
ಲಿಂಗನಖಾನದೊಡ್ಡಿ, ಬಿಜನಗೇರಾ, ಕಮಲಾಪುರ ಹಾಗೂ ಕಲ್ಮಲಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಬಹಳಷ್ಟಿದೆ. ಇಡಪನೂರು ಗ್ರಾಮ ಪಂಚಾಯತಿಗೆ ತುಂಗಭದ್ರಾ ನದಿಯಿಂದ ಕುಡಿವ ನೀರು ಸರಬರಾಜು ಮಾಡಲಾಗುತ್ತದೆ. ಇದೇ ನೀರನ್ನು ಲಿಂಗನಖಾನದೊಡ್ಡಿ, ಜಂಬಲದಿನ್ನಿ ಗ್ರಾಮ ಪಂಚಾಯತಿಗಳಿಗೆ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದರು.
ಕಮಲಾಪೂರು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಿಬೇಕು. ಕಮಲಾಪುರದಲ್ಲಿ ಎರಡು ಟ್ಯಾಂಕ್ಗಳಿದ್ದು, ಇವುಗಳಿಗೆ ನೀರಿನ ಸೌಲಭ್ಯ ಒದಗಿಸಿಲ್ಲ. ಮಂಜರ್ಲಾ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಬೇಕು. ಹುಣಸಿಹಾಳ ಹುಡಾ ಗ್ರಾಮದಲ್ಲೂ ನೀರಿನ ಸಮಸ್ಯೆಯಿದ್ದು, ಹಲವು ಬಾರಿ ಮನವಿ ಸಲ್ಲಿಸಿದರೂ, ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿದರು.
ಅಶುದ್ಧವಾದ ನೀರು ಸೇವಿಸಿ ಜನರು ರೋಗಗಳಿಂದ ಬಳಲುತ್ತಿದ್ದಾರೆ. ನೀರಿನ ಸಮಸ್ಯೆಯನ್ನು ಗಂಭಿರವಾಗಿ ಪರಿಗಣಿಸಿ ತ್ವರಿತವಾಗಿ ನೀರಿನ ಸೌಲಭ್ಯ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾ ಘಟಕ ಅಧ್ಯಕ್ಷ ವಾಸುದೇವ ಮೇಟಿ, ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ರೆಡ್ಡಿ, ತಾಲ್ಲೂಕು ಮಹಿಳಾ ಘಟಕ ಅಧ್ಯಕ್ಷೆ ಉಮಾದೇವಿ, ಬಡೇಸಾಬ್, ಕೃಷ್ಣ, ಕೆ.ನರಸಿಂಹ ನಾಯಕ, ಹನುಮಂತಪ್ಪ ನಾಯಕ, ನರಸಿಂಹಲು, ಎಸ್.ನರಸಿಂಹ ನಾಯಕ, ಹುಸೇನಿ, ಪದ್ಮಾ, ಭಾಗ್ಯಶ್ರೀ, ಉಮಾ, ಕಮಲಮ್ಮ, ದೇವಮ್ಮ ಇದ್ದರು.