ರಾಯಚೂರು: ನಿವೇಶನ ರಹಿತ ಬಡ ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಬೇಕು ಹಾಗೂ ಅಘೋಷಿತ ಕೊಳೆಗೇರಿ ಪ್ರದೇಶಗಳನ್ನು ಅಧಿಕೃತವಾಗಿ ಕೊಳೆಗೇರಿಗಳೆಂದು ಘೋಷಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾವೇದಿಕೆಯು ಶುಕ್ರವಾರದಿಂದ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಲಾಯಿತು.
ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಧರಣಿ ಆರಂಭಿಸಲಾಗಿದ್ದು, ಜಿಲ್ಲಾಧಿಕಾರಿ ಕಚೇರಿಯ ಸ್ಥಾನಿಕ ಅಧಿಕಾರಿಗೆ ಮನವಿ ಸಲ್ಲಿಸದರು. ನಿವೇಶನ ರಹಿತ ಬಡ ಕುಟುಂಬಗಳಿಗೆ ಹಂಚಿಕೆಯಾಗಬೇಕಾದ ನಿವೇಶನಗಳನ್ನು ಅಭಿವೃದ್ಧಿಪಡಿಸಿ ಶೀಘ್ರದಲ್ಲಿ ನಿವೇಶನ ಹಂಚಿಕೆ ಮಾಡಬೇಕು. ವಾಜಪೇಯಿ ನಗರ ನಿವೇಶನ ಯೋಜನೆಯಡಿ ನಿವೇಶನ ಮಂಜೂರಿಯಾದ ಯೋಜನೆಯ ಫಲಾನುಭವಿಗಳಿಗೆ ಇನ್ನೂ ಕೆಲವರಿಗೆ ನಿವೇಶನ ಹಕ್ಕುಪತ್ರ ನೀಡಿರುವುದಿಲ್ಲ. ಅವರಿಗೆ ಕೂಡಲೇ ಹಕ್ಕುಪತ್ರಗಳನ್ನು ನೀಡಿ, ಆಶ್ರಯ ಕಮಿಟಿ ಸಭೆಯಲ್ಲಿ ತೀರ್ಮಾನಿಸಿದಂತೆ ನಗರಸಭೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡ ಮನೆಗಳಿಗೆ ಹಕ್ಕುಪತ್ರ ಹಾಗೂ ಫಾರಂ ನಂ 3 ಶೀಘ್ರದಲ್ಲಿ ನೀಡುವಂತೆ ಒತ್ತಾಯಿಸಿದರು.
ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಅಧ್ಯಕ್ಷ ಜನಾಧರ್ನ ಹಳ್ಳಿಬೆಂಚಿ, ಉಪಾಧ್ಯಕ್ಷ ವೆಂಕಟೇಶ ಭಂಡಾರಿ, ನೂರ್ ಜಹಾನ್, ಬಸವರಾಜ ಹೊಸರು, ನಾಗರಾಜ, ರಾಮು, ವೀರೇಶ ಇದ್ದರು.