ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳು ಮಾಫಿಯಾ ತಡೆಗಟ್ಟಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡಿಗರ ರಕ್ಷಣಾ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ ಅನೇಕ ವರ್ಷಗಳಿಂದಲೂ ಅಕ್ರಮವಾಗಿ ಮರಳು ಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಇದರ ಹಿಂದೆ ಅಧಿಕಾರಿಗಳು ಹಾಗೂ ಮರಳು ಗುತ್ತಿಗೆದಾರರು, ರಾಜಕೀಯ ಪ್ರಭಾವಿ ವ್ಯಕ್ತಿಗಳು, ಸಂಬಂಧಿಕರು, ಬೆಂಬಲಿಗರು ಶಾಮೀಲಾಗಿದ್ದಾರೆ. ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದರು.
ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ವಿಶ್ವನಾಥ ಹಾಗೂ ಗುತ್ತಿಗೆದಾರರಾದ ಆನಂದ ದೊಡ್ಡಮನಿ, ಪಿ.ಎಲ್ ಕಾಂಬಳೆ ಅವರು ಟೆಂಡರ್ ನಿಯಮಗಳನ್ನು ಉಲ್ಲಂಘಣೆ ಮಾಡಿ ಅಕ್ರಮ ಮರಳು ಗಣಿಗಾರಿಕೆ ಮಾಡಿದ್ದಾರೆ. ಇವರ ವಿರುದ್ಧ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಬಂಧಿಸಿಲ್ಲ ಎಂದು ಆಪಾದಿಸಿದರು.
ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಇಮ್ರಾನ್ ಬಡೇಸಾಬ್, ಜಿಲ್ಲಾಧ್ಯಕ್ಷ ರಾಮು, ಮಹಿಳಾ ಘಟಕದ ಹೈ.ಕ ವಿಭಾಗದ ಅಧ್ಯಕ್ಷೆ ಜ್ಯೋತಿ, ಜಿಲ್ಲಾಧ್ಯಕ್ಷೆ ಸುಷ್ಮಾ, ಅಪೋಜಲ್, ಇಂದಿರಾ, ರಸೂಲ್ ಸಾಬ್, ನೂರು, ಭೀಮೇಶ, ನರಸಿಂಹ ಇದ್ದರು.