ರಾಯಚೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡನೀಯ, ಕೂಡಲೇಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸಂವಿಧಾನ ಹಕ್ಕುಗಳಿಗಾಗಿ ನಾಗರಿಕ ವೇದಿಕೆ ಜಿಲ್ಲಾ ಸಂಚಾಲಕ ಎಸ್.ಮಾರೆಪ್ಪ ವಕೀಲರು ಒತ್ತಾಯಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು. ಗಾಂಧಿವಾದಿ ಎಚ್.ಎಸ್.ದೊರೆಸ್ವಾಮಿ ಅವರನ್ನು ನಕಲಿ ಸ್ವಾತಂತ್ರ್ಯ ಹೋರಾಟಗಾರ, ಪಾಕಿಸ್ತಾನದ ಏಜೆಂಟ್ ಎಂದು ಕರೆಯುವ ಮೂಲಕ ದೊರೆಸ್ವಾಮಿ ಅವರಿಗೆ ಮಾತ್ರವಲ್ಲದೇ ಇದು ನಾಡಿಗೆ ಅವಮಾನ ಮಾಡಿದ್ದಾರೆ ಎಂದರು.
ಪಾಕಿಸ್ತಾನ ಜಿಂದಾಬಾದ್, ಪಾಕಿಸ್ತಾನ ಬಾವುಟ ಹಾರಿಸಿ ಮುಸ್ಲಿಮರ ತಲೆಗೆ ಕಟ್ಟುವ ಕುತಂತ್ರ ಮಾಡುವವರನ್ನು ದೇಶದ್ರೋಹ ಕಾನೂನಿನಡಿ ಬಂಧಿಸುವಂತೆ ಆಗ್ರಹಿಸಿದರು.
ದೆಹಲಿಯಲ್ಲಿ ಸಿಎಎ ವಿರುದ್ಧ ಶಾಂತಿಯುತ ಹೋರಾಟ ನಡೆಯುತ್ತಿತ್ತು. ಆದರೆ, ಕಪಿಲ್ ಮಿಶ್ರಾ ಅವರು ಹೋರಾಟಗಾರರ ಮೇಲೆ ಕಲ್ಲು ತೂರಾಟ ಮತ್ತಿತರ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರಿಂದ ಹಿಂಸಾತ್ಮಕ ಸ್ವರೂಪ ಪಡೆದಿದ್ದು ದುರಾದೃಷ್ಟಕರ ಸಂಗತಿ ಎಂದರು.