ರಾಯಚೂರು: ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಅಖಿಲ ಭಾರತ ನಿರುದ್ಯೋಗಿ ಯುವಜನರ ಹೋರಾಟ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಗುರುವಾರ ಮನವಿ ಸಲ್ಲಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಯಾವುದೇ ನೇಮಕಾತಿ ನಡೆಸಿಲ್ಲ. ಅಲ್ಪ-ಸ್ವಲ್ಪ ನೇಮಕಾತಿಗಳೂ ಪೂರ್ಣಗೊಂಡಿಲ್ಲ. ಉದ್ಯೋಗದ ಕನಸು ಕಾಣುತ್ತಿರುವ ಲಕ್ಷಾಂತರ ಯುವಜನರು ವಯೋಮಿತಿ ಮೀರುತ್ತಿದ್ದಾರೆ ಎಂದು ದೂರಿದರು.
ರಾಜ್ಯ ಸರ್ಕಾರ ಪೊಲೀಸ್ ನೇಮಕಾತಿಗೆ ನಿಗದಿಪಡಿಸಿರುವ ವಯೋಮಿತಿ ಕಡಿಮೆ ಇದೆ. ನೆರೆ ರಾಜ್ಯ ಮಹಾರಾಷ್ಟ್ರ, ಆಂದ್ರಪ್ರದೇಶ, ತಮಿಳುನಾಡು, ಕೇರಳ ಸೇರಿ ಹಲವು ರಾಜ್ಯಗಳಲ್ಲಿ ಪೋಲಿಸ್ ನೇಮಕಾತಿಯ ಗರಿಷ್ಠ ವಯೋಮಿತಿ 30ರಿಂದ 35 ವರ್ಷಗಳಿದ್ದರೆ ಕರ್ನಾಟಕ ರಾಜ್ಯದಲ್ಲಿ 25ರಿಂದ 27 ವರ್ಷಕ್ಕೆ ಮಾತ್ರ ಸೀಮಿತಗೊಳಿಸಿದ್ದು ಯುವಕರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೋವಿಡ್ ಕಾರಣದಿಂದ ಪಿಎಸ್ಐ ನೇಮಕಾತಿಗೆ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸಿದ್ದಂತೆ ಪೋಲಿಸ್ ನೇಮಕಾತಿಯಲ್ಲಿಯೂ ಗರಿಷ್ಠ ವಯೋಮಿತಿಯನ್ನು ಕನಿಷ್ಠ 3ರಿಂದ 4 ವರ್ಷ ಹೆಚ್ಚಿಸಬೇಕು. ಈ ಕುರಿತು ಶಾಸಕರು ವಿಧಾನಸಭೆಯಲ್ಲಿ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಸಮಿತಿಯ ರಾಜ್ಯ ಕಾರ್ಯದರ್ಶಿ ಚನ್ನಬಸವ ಜಾನೇಕಲ್, ವಿನೋದ್ ಕುಮಾರ, ಪೋಲಿಸ್ ಆಕಾಂಕ್ಷಿ ನಾಗೇಶ, ರಮೇಶ, ಸಬ್ಜಲಿ, ಮಾರುತಿ, ಮಂಜುನಾಥ, ಮಲ್ಲೇಶ, ಮೌಲಾಸಾಬ, ಕಲ್ಯಾಣ್ ಕುಮಾರ ಇದ್ದರು.