ರಾಯಚೂರು: ತಾಲ್ಲೂಕಿನ ಪೂರತಿಪ್ಲಿ ಗ್ರಾಮದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಹತ್ತಿ ಬೆಳೆಗಾರ ರೈತರ ಹೋರಾಟ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಗುರುವಾರ ಕಚೇರಿಗೆ ಬೀಗಹಾಕಿ ಪ್ರತಿಭಟನೆ ನಡೆಸಿದರು.
ಒಂದು ತಿಂಗಳಿನಿಂದ ಮನವಿ ಮಾಡುತ್ತಿದ್ದರೂ, ಯಾವುದೇ ಸ್ಪಂದನೆ ನೀಡುತ್ತಿಲ್ಲ. ಕುಡಿಯುವ ನೀರಿನ ಪೈಪಲೈನ್ನಿಂದ ಕೆಲ ಪಟ್ಟಭದ್ರ ಹಿತಾಸಕ್ತಿಗಳಿಗೆ ಮಾತ್ರ ನೀರು ಸರಬರಾಜು ಆಗುತ್ತಿದ್ದು, ಸಾಮಾನ್ಯ ಜನರಿಗೆ ನೀರು ಸರಬರಾಜು ಆಗುತ್ತಿಲ್ಲ ಎಂದು ಆರೋಪಿಸಿದರು.
ಈ ಬಗ್ಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ, ಸಮಸ್ಯೆಯನ್ನು ಬಗೆಹರಿಸಿಲ್ಲ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಜನರ ಸಮಸ್ಯೆ ಬಗೆಹರಿದಿಲ್ಲ. ಆದ್ದರಿಂದ ತ್ವರಿತವಾಗಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ಈಚೆಗೆ ಮನವಿ ನೀಡಿದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಂಚಾಯಿತಿ ಕಚೇರಿಯ ಮುಂದೆ ಖಾಲಿ ಕೊಡಗಳನ್ನಿಟ್ಟು ಅಧಿಕಾರಿಗಳ ಧೋರಣೆಯನ್ನು ಖಂಡಿಸಿದರು. ಮಹಿಳೆಯರು ಸೇರಿದಂತೆ ಅನೇಕ ಗ್ರಾಮಸ್ಥರು ಪಾಲ್ಗೊಂಡಿದ್ದರು.ಅಧ್ಯಕ್ಷ ಚಿನ್ನಯ್ಯ ನಾಯಕ, ರಮೇಶ, ಬಜಾರಿ, ಉರುಕುಂದಪ್ಪ, ಹನುಮಂತಪ್ಪ ನಾಯಕ, ಶ್ರೀದೇವಿ, ಲಕ್ಷ್ಮಮ್ಮ, ಪ್ರಭಾವತಿ ನೇತೃತ್ವ ವಹಿಸಿದ್ದರು.