ರಾಯಚೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ತಾಲ್ಲೂಕಿನ ಉಡುಮಗಲ್-ಖಾನಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ರಾಮು ಅವರನ್ನು ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅಮಾನತುಗೊಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಅವರ ಬೆಂಗಳೂರಿನ ಮನೆಗೆ ಈಚೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿದ ವೇಳೆ ಸಹ ಶಿಕ್ಷಕ ರಾಮು ಊಟ ಬಡಿಸುತ್ತಿದ್ದರು ಎಂದು ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ನೋಡಲ್ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಭಂಡಾರಿ ಅವರಿಂದ ಮಾಹಿತಿ ಪಡೆದಿದ್ದಾರೆ. ಪೂಜಾ ಕಾರ್ಯಕ್ರಮ ಎಂದು ಹೇಳಿ ಹೋದ ಶಿಕ್ಷಕ ರಾಜಕೀಯ ನಾಯಕರೊಂದಿಗೆ ಕಾಣಿಸಿಕೊಂಡಿದ್ದರು ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
ಸರ್ಕಾರಿ ಕೆಲಸದಲ್ಲಿ ನಿರ್ಲಕ್ಷ್ಯ, ಕೇಂದ್ರ ಸ್ಥಾನ ಬಿಡಲು ಅನುಮತಿ ಪಡೆಯದೆ ನೀತಿ ಸಂಹಿತೆ ಸಮಯದಲ್ಲಿ ರಾಜಕೀಯ ವ್ಯಕ್ತಿಗಳ ಜೊತೆಯಲ್ಲಿ ಕಾಣಿಸಿಕೊಂಡ ಅವರು ಕರ್ತವ್ಯಲೋಪವೆಸಗಿದ ಕಾರಣ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಚಂದ್ರಶೇಖರ ನಾಯಕ ಆದೇಶದಲ್ಲಿ ತಿಳಿಸಿದ್ದಾರೆ.