ರಾಯಚೂರು: ಲೋಕಸಭೆ ಚುನಾವಣೆಯ ಮತದಾನದ ಜಾಗೃತಿ ಮೂಡಿಸಲಾಗುತ್ತಿದ್ದು, ಪ್ರತಿಯೊಬ್ಬ ಮತದಾರರು ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ಹೇಳಿದರು.
ಜಿಲ್ಲಾ ಪಂಚಾಯಿತಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿಯಿಂದ ಶನಿವಾರ ಆಯೋಜಿಸಿದ್ದ ತೃತೀಯ ಲಿಂಗಿಗಳ, ದೇವದಾಸಿ ಮಹಿಳೆಯರ, ವಿಕಲಚೇತನರ ಹಾಗೂ ಇತರೆ ಸಮುದಾಯದವರ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಮತದಾನದ ಜಾಗೃತಿಗಾಗಿ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳು ನಡೆಯುತ್ತಿದ್ದು, ಮತದಾರರು ಜಾಗೃತರಾಗಿ ಮತ ಚಲಾಯಿಸಬೇಕು ಎಂದರು.
ಇದೇ ವೇಳೆ ಮತದಾನದ ಪ್ರತಿಜ್ಞಾ ವಿಧ ಬೋಧಿಸಲಾಯಿತು. ಜಿಲ್ಲಾ ಪಂಚಾಯಿತಿ ಕಚೇರಿಯಿಂದ ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಜಾಗೃತಿ ಜಾಥಾ ನಡೆಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಲಿನ್ ಅತುಲ್, ಉಪವಿಭಾಗಾಧಿಕಾರಿ ಶಿಲ್ಪಾ ಶರ್ಮಾ ಇದ್ದರು.