ಮುದಗಲ್: ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಮಲ್ಲಪ್ಪ ಪುರಸಭೆ ಮುಖ್ಯಾಧಿಕಾರಿಗೆ ಸೂಚನೆ ನೀಡಿದರು.
ಪಟ್ಟಣಕ್ಕೆ ಮೂಲ ಸೌಕರ್ಯ ಒದಗಿಸಬೇಕು. ಇಲ್ಲದಿದ್ದರೆ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪುರಸಭೆ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದರು.
23 ವಾರ್ಡ್ಗಳಲ್ಲಿ 128 ಸಿಂಟೆಕ್ಸ್ಗಳಿವೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ, ದುರಸ್ತಿ ಮಾಡಿಸಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆಯಬೇಕು. ಸಮಸ್ಯೆ ಇರುವ ವಾರ್ಡ್ಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿಸಬೇಕು. ನೀರು ಪೂರೈಕೆ ಮಾಡುವ ವಾರ್ಡ್ಗಳ ಪಟ್ಟಿ ಮಾಡಿ ಜೆಸ್ಕಾಂ ಅಧಿಕಾರಿಗಳಿಗೆ ನೀಡಬೇಕು. ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಒತ್ತಾಯಿಸಿದರು.
ಸಭೇಯ ಬಳಿಕ ತಹಶೀಲ್ದಾರ್ ಮಲ್ಲಪ್ಪ ಅವರು ಕೋಟೆ ಮುಂಭಾಗದ ಕಂದಕಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಬೇಡಿಕೆ ಈಡೇರಿಸಿ ಕಂದಕ ಸ್ವಚ್ಛ ಮಾಡಿಸಬೇಕು ಎಂದು ಸೂಚನೆ ನೀಡಿದರು.
ಮುಖ್ಯಾಧಿಕಾರಿ ನಬಿ ಎಂ.ಕಂದಗಲ್, ಕಂದಾಯ ನಿರೀಕ್ಷಕ ಶಂಕ್ರಪ್ಪ ಪಟ್ಟಣಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯೀಂ, ದಲಿತ ಮುಖಂಡರಾದ ಬಸವರಾಜ ಬಂಕದಮನಿ, ಶರಣಪ್ಪ ಕಟ್ಟಿಮನಿ, ಸಾಬು ಹುಸೇನ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.