ಮಸ್ಕಿ: ‘ಮುಂಬರುವ ದಿನಗಳಲ್ಲಿ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ. ಕಾರಣ ಸಾರ್ವಜನಿಕರಿಗೆ ಐದು ದಿನಗಳಿಗೊಮ್ಮೆ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು’ ಎಂದು ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ ಅವರು ತಿಳಿಸಿದ್ದಾರೆ.
ಪಟ್ಟಣದಲ್ಲಿ ಬುಧವಾರ ‘ಪ್ರಜಾವಾಣಿ’ ಯೊಂದಿಗೆ ಮಾತನಾಡಿದ ಅವರು,‘ತುಂಗಭದ್ರಾ ಎಡದಂಡೆ ಕಾಲುವೆ ಪಕ್ಕದಲ್ಲಿರುವ ಶುದ್ಧ ಕುಡಿಯುವ ನೀರು ಸಂಗ್ರಹ ಕೆರೆಯಲ್ಲಿ 23 ಅಡಿ ನೀರು ಮಾತ್ರ ಲಭ್ಯ ಇದೆ. ಬರುವ ದಿನಗಳಲ್ಲಿ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ’ ಎಂದು ಅವರು ಹೇಳಿದರು.
ಸಾರ್ವಜನಿಕರಿಗೆ ಬೇಸಿಗೆ ದಿನಗಳಲ್ಲಿ ನೀರಿನ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಗಾಗಲೇ ನೀರು ಸ್ಥಗಿತಗೊಂಡಿದೆ. ಕಾಲುವೆಗೆ ನೀರು ಬಿಡುವವರೆಗೂ ಇದೇ ನೀರನ್ನು ಬಳಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.
ಇದರ ಜತೆಗೆ ಖಾಸಗಿ ವ್ಯಕ್ತಿಗಳ ಕೊಳವೆಬಾವಿಯಿಂದಲೂ ನೀರು ಪಡೆದು ಜನರಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಲಾಗುವುದು. ಅಗತ್ಯ ಬಿದ್ದರೆ ನೀರಿನ ಮೂಲ ಹುಡುಕಿ ಹೆಚ್ಚುವರಿ ಕೊಳವೆಬಾವಿ ಕೊರೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಿ ಪುರಸಭೆ ಆಡಳಿತ ಮಂಡಳಿ ಜತೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.