ರಾಯಚೂರು: ಅಕ್ರಮ ಮದ್ಯ ಮಾರಾಟ ತಡೆಗಾಗಿ ಹೈಕೋರ್ಟ್ ಆದೇಶ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಮಹಿಳೆಯರು ನಡೆಸುತ್ತಿರುವ ರಾಜ್ಯಮಟ್ಟದ ಧರಣಿ ಶುಕ್ರವಾರ 25 ದಿನಗಳನ್ನು ಪೂರ್ಣಗೊಳಿಸಿದ್ದು, ರ್ಯಾಲಿ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಕ್ರೀಡಾಂಗಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ರ್ಯಾಲಿ ನಡೆಯಿತು.
ಜಿಲ್ಲೆಯ 178 ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು ಈ ಬಗ್ಗೆ ದಾಖಲೆ ಸಹಿತ ಜಿಲ್ಲಾಡಳಿತ ಹಾಗೂ ಅಬಕಾರಿ ಇಲಾಖೆಗೆ ವರದಿ ಸಲ್ಲಿಸಿದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದೇ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ. ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ಹಳ್ಳಿಯಲ್ಲಿ 5 ಜನ ಮಹಿಳೆಯರು ಒಳಗೊಂಡ ಕಾವಲು ಸಮಿತಿ ರಚಿಸಿ ಅರೆ ನ್ಯಾಯಾಂಗ ಅಧಿಕಾರ ನೀಡಬೇಕು ಎಂದು ಒತ್ತಾಯಿಸಿದರು.
ಅಕ್ರಮ ಮದ್ಯ ಮಾರಾಟದ ಕುರಿತು ಹೈಕೋರ್ಟ್ ಆದೇಶ ನೀಡಿದ್ದರೂ ರಾಜ್ಯ ಸರ್ಕಾರ ಪಾಲನೆ ಮಾಡುತ್ತಿಲ್ಲ. ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.