ರಾಯಚೂರು: ‘ಜಿಲ್ಲೆಯಲ್ಲಿ ಮಕ್ಕಳ ರೋಗ ನಿರೋಧಕ ಶಕ್ತಿ ಬೆಳೆಸಲು ದಿಸೆಯಲ್ಲಿ ಲಸಿಕೆ ನೀಡುವ ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಸಹಕಾರ ನೀಡಬೇಕು’ ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಿಷನ್ ಇಂದ್ರಧನುಷ್ ತೀವ್ರಗೊಳಿಸುವಿಕೆ ಮತ್ತು ದಡಾರ ಮತ್ತು ರುಬೆಲ್ಲಾ ನಿಮೂರ್ಲನೆಗಾಗಿ ಹಮ್ಮಿಕೊಂಡಿದ್ದ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿರುವ ಗರ್ಭಿಣಿಯರು ಮತ್ತು ಹುಟ್ಟಿನಿಂದ 5 ವರ್ಷದವರೆಗಿನ ಮಕ್ಕಳ ಮಾಹಿತಿಯನ್ನು ಪಡೆದುಕೊಂಡು ಮಾಹಿತಿಯನ್ವಯ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಪಡೆಯಬೇಕಾಗಿರುವ, ಪಡೆಯದೇ ಇರುವ ಮತ್ತು ಬಿಟ್ಟು ಹೋಗಿರುವ ಪಟ್ಟಿಯನ್ನು ತಯಾರಿಸಿಕೊಂಡು ಪರಿಶೀಲಿಸಬೇಕು, ಗರ್ಭಿಣಿ ಯರ ಟಿಡಿ ಲಸಿಕಾಕರಣ ಮತ್ತು ಮಕ್ಕಳ ಲಸಿಕಾಕರಣದ ಕುರಿತು ತಾಯಂದಿರ ಸಭೆಗಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿನ ಹೆಚ್ಚು ಆರೋಗ್ಯ ಅಪಾಯದಂಚಿನಲ್ಲಿರುವ ಪ್ರದೇಶಗಳನ್ನು ಗುರುತಿಸಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ಲಸಿಕೆ ನಿರಾಕರಿಸುವ ಕುಟುಂಬಗಳನ್ನು ಮನವೊಲಿಸಿ ಲಸಿಕಾಕರಣವನ್ನು ಯಶಸ್ವಿಗೊಳಿಸುವಲ್ಲಿ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ‘ಎಲ್ಲ ಶಾಲೆಗಳಲ್ಲಿ ಇಂದ್ರಧನುಷ್ ಅಭಿಯಾನದ ಬಗ್ಗೆ ತಿಳಿವಳಿಕೆ ನೀಡಬೇಕು. ಖಾಸಗಿ ಶಾಲೆಗಳಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಇಂದ್ರಧನುಷ 5.0 ಕಾರ್ಯಕ್ರಮದಲ್ಲಿ ಲಸಿಕೆ ಕೊಡಿಸಲು ಪೋಷಕರಿಗೆ ಪ್ರೇರೇಪಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿ ಡಾ.ಅನಿಲ್ಕುಮಾರ ತಾಳಿಕೋಟೆ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಶಸ್ತ್ರ ಚಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೃಷಬೇಂದ್ರಯ್ಯ, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಚೇತನಕುಮಾರ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಗಣೇಶ, ತಾಲೂಕು ವೈದ್ಯಾಧಿಕಾರಿ ಡಾ.ಶಖೀರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.