ರಾಯಚೂರು: ಸಕಾಲ ಯೋಜನೆಯ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯವಹಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನ್ವಿ, ಲಿಂಗಸುಗೂರು ತಾಲ್ಲೂಕು ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎನ್ ನಾಗರಾಜು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರೋಗ್ಯಾಧಿಕಾರಿಗೆ ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಸಕಾಲ ಯೋಜನೆ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.
ಆರೋಗ್ಯ ಇಲಾಖೆಯ ಜನನ– ಮರಣ, ಅಂಗವಿಕಲರ ಸೇರಿದಂತೆ ನಾಲ್ಕು ವಿಭಾಗಗಳು ಸಕಾಲ ಯೋಜನೆಯ ವ್ಯಾಪ್ತಿಗೆ ಬರುತ್ತವೆ . ಈಗಾಗಲೇ ಈ ವಿಭಾಗಗಳಿಗೆ ಸಂಬಂಧಿಸಿದಂತೆ 7.745 ಅರ್ಜಿ ಸ್ವೀಕರಿಸಲಾಗಿದೆ. ಮಾನ್ವಿ ತಾಲ್ಲೂಕಿನಲ್ಲಿ ಸಿಬ್ಬಂದಿ ಕೊರತೆ ಇದ್ದ ಹಿನ್ನೆಲೆಯಲ್ಲಿ ಅರ್ಜಿ ಸ್ವೀಕಾರ ಸ್ಥಗಿತಗೊಳಿಸಲಾಗಿದೆ. ಕೂಡಲೇ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿ ಮುಂದಿನ ಪ್ರಗತಿ ಪರಿಶೀಲನಾ ಸಭೆಯೊಳಗಾಗಿ ಎಲ್ಲ ಅರ್ಜಿಗಳ ವಿಲೇವಾರಿ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾರಾಯಣಪ್ಪ ಸಭೆಯಲ್ಲಿ ತಿಳಿಸಿದರು.
ಸಾರಿಗೆ ಇಲಾಖೆಯಲ್ಲಿ ಈಗಾಗಲೇ 49.172 ಅರ್ಜಿಯನ್ನು ಸ್ವೀಕರಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.
ಸಾರಿಗೆ ಇಲಾಖೆಯ ಅಧಿಕಾರಿ ನೀಡಿದ ಮಾಹಿತಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಸಾರಿಗೆ ಇಲಾಖೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಅಧಿಕಾರಿಗಳು ನಿಗಾವಹಿಸಬೇಕು ಎಂದು ಸೂಚಿಸಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಸಕಾಲ ಯೋಜನೆಯಡಿ 53.795 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ನೂತನ ಪಡಿತರ ಚೀಟಿಗಳು ಹಾಗೂ ಬದಲಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಆಹಾರ ಇಲಾಖೆಯ ಅಧಿಕಾರಿಗಳು ಸಭೆಗೆ ವಿವರಿಸಿದರು.
ತಹಶೀಲ್ದಾರ್ ಅಶೋಕ ಜಹಾಗೀರದಾರ್, ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಾಂಜನೇಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ರೂಪಾ ಬಂಡಿ, ಆಯಿಶಾ ಹಾಗೂ ದಯಾನಂದ ಸೇರಿದಂತೆ ಅನೇಕ ಅಧಿಕಾರಿಗಳು ಪಾಲ್ಗೊಂಡಿ ದ್ದರು.