ಮಸ್ಕಿ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ `ಮಸ್ಕಿ ಬಂದ್~ನ್ನು ಸಂಪೂರ್ಣ ಯಶಸ್ವಿಯಾಗಿ ಆಚರಿಸಲಾಯಿತು.
ಬಂದ್ ಅಂಗವಾಗಿ ಪಟ್ಟಣದ ಎಲ್ಲಾ ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದವು. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ಸರ್ಕಾರಿ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ಮುಚ್ಚಿದ್ದವು.
ಸಾರಿಗೆ ಸಂಚಾರ ವಿರಳವಾಗಿತ್ತು. ಬಂದ್ ಹಿನ್ನಲೆಯಲ್ಲಿ ಇಲ್ಲಿಯ ಜನಜೀವನ ಸಂಪೂರ್ಣವಾಗಿ ಅಸ್ವಸ್ತಗೊಂಡಿತ್ತು.
ನಂತರ ಗಾಂಧಿವೃತ್ತದಿಂದ ಆರಂಭಗೊಂಡ ಕನ್ನಡಪರ ಸಂಘಟನೆಗಳ ಪ್ರತಿಭಟನಾ ರ್ಯಾಲಿಯು ಮುಖ್ಯಬಜಾರ, ವಾಲ್ಮೀಕಿ ವೃತ್ತ, ಕನಕ ವೃತ್ತದ ಮಾರ್ಗವಾಗಿ ಹಳೇ ಬಸ್ ನಿಲ್ದಾಣಕ್ಕೆ ಆಗಮಿಸಿತು. ಕನ್ನಡಿಗರಿಗೆ ಸರಿಯಾಗಿ ನೀರಿಲ್ಲ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ತಮಿಳುನಾಡಿಗೆ ನೀರು ಬಿಡುವಂತೆ ಸೂಚಿಸಿರುವುದು ಖಂಡನೀಯ ಎಂದು ಪ್ರತಿಭಟನಕಾರರು ಆರೋಪಿಸಿದರು.
ಪ್ರಧಾನಿ ಮನಮೋಹನಸಿಂಗ್ ಹಾಗೂ ತಮಿಳುನಾಡು ಹಾಗೂ ಕರ್ನಾಟಕ ಮುಖ್ಯಮಂತ್ರಿಗಳ ವಿರುದ್ಧ ಸಂಘಟನೆಯ ಕಾರ್ಯಕರ್ತರು ಘೋಷಣೆ ಕೂಗಿದರು.
ಹಳೇ ಬಸ್ ನಿಲ್ದಾಣ ಬಳಿ ಪ್ರಧಾನಿ ಹಾಗೂ ತಮಿಳುನಾಡು ಹಾಗೂ ಕರ್ನಾಟಕ ಮುಖ್ಯಮಂತ್ರಿಗಳ ಪ್ರತಿಕೃತಿ ದಹನ ನಡೆಸಲಾಯಿತು. ಕಾವೇರಿ ವಿಷಯದಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ ಕರ್ನಾಟಕಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿ ಬರೆದ ಮನವಿ ಪತ್ರವನ್ನು ವಿಶೇಷ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.
ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಯಮನೂರು ಒಡೆಯರ್, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಅಮರೇಶ ಹೂಗಾರ, ಕರ್ನಾಟಕ ರಕ್ಷಣ ವೇದಿಕೆ (ಪ್ರವೀಣಶೆಟ್ಟಿ ಬಣ) ಅಧ್ಯಕ್ಷ ಅಶೋಕ ಮುರಾರಿ, ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ದ ಅಧ್ಯಕ್ಷ ಮಲ್ಲಯ್ಯ ಮುರಾರಿ, ನವ ಕರ್ನಾಟಕ ನಿರ್ಮಾಣ ವೇದಿಕೆ ಅಧ್ಯಕ್ಷ ರಾಘವೇಂದ್ರ ದೇವರಮನಿ ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದವು.
ಬಂದ್ ಹಿನ್ನಲೆಯಲ್ಲಿ ಸಿಪಿಐ ಲಕ್ಷ್ಮೀನಾರಾಯಣ ಹಾಗೂ ಪಿಎಸ್ಐ ವೆಂಕಟೇಶ ಮುರ್ನಾಳ ನೇತೃತ್ವದಲ್ಲಿ ಬೀಗಿ ಪೊಲೀಸ ಬಂದೋಬಸ್ತ್ ಮಾಡಲಾಗಿತ್ತು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.