ರಾಯಚೂರು: ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ನಗರದ ಹೊರ ವಲಯದಲ್ಲಿರುವ ಕೃಷಿ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಆಚರಿಸಲು ಜಿಲ್ಲಾಡಳಿತ ಬುಧವಾರ ನಿರ್ಧರಿಸಿದೆ.
ನಗರದ ಹೃದಯ ಭಾಗದಲ್ಲಿರುವ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮಳೆ ನೀರು ನಿಂತು ಗಲೀಜು ಆಗಿದೆ. ಸ್ವಚ್ಛ ಮಾಡುವ ಸ್ಥಿತಿಯಲ್ಲಿ ಇಲ್ಲ. ಅಲ್ಲದೇ ಕ್ರೀಡಾಂಗಣದ ಸುತ್ತಲೂ ಇರುವ ಸಂಕೀರ್ಣ ಶಿಥಿಲಾವಸ್ಥೆಯಲ್ಲಿದೆ. ಈಗ ಆಗುತ್ತಿರುವ ಮಳೆಗೆ ಬಿದ್ದು ಹೋಗುವ ಆಪಾಯ ಕೂಡಾ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಬಾರಿ ಕೃಷಿ ವಿವಿ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನ ಆಚರಿಸಲು ನಿರ್ಧರಿಸಿದೆ.
ಬುಧವಾರ ಉಪವಿಭಾಗಾಧಿಕಾರಿ ಕಚೇರಿ ಸಭಾಭವನದಲ್ಲಿ ಜಿಲ್ಲಾಧಿಕಾರಿ ಎಸ್.ಎನ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಈ ನಿರ್ಧಾರ ಪ್ರಕಟಿಸಿದರು.
ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಆಚರಣೆಗಾಗಿ ವಿವಿಧ ಇಲಾಖೆಗೆ ವಹಿಸಿದ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಈ ರಾಷ್ಟ್ರೀಯ ಹಬ್ಬದ ಆಚರಣೆಗೆ ಗೈರು ಹಾಜರಾಗಿ ಬೇಜವಾಬ್ದಾರಿ ಪ್ರದರ್ಶಿಸುವ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕವಾಯತು ಮಕ್ಕಳಿಗೆ ಬಸ್ ವ್ಯವಸ್ಥೆ: ಸ್ವತಂತ್ರ್ಯ ದಿನ ಕವಾಯತು ನಡೆಸುವ ಶಾಲಾ ಮಕ್ಕಳಿಗೆ ಆಗಸ್ಟ್ 11ರಿಂದ 13ರವರೆಗೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸುವುದು, 15ರಂದು ಮಕ್ಕಳನ್ನು ಕರೆದೊಯ್ಯುವುದು ಮತ್ತು ವಾಪಸ್ ಕರೆ ತರಲು ಸಾರಿಗೆ ಇಲಾಖೆಗೆ ವಹಿಸಿದರು.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಸಂದರ್ಭದಲ್ಲಿ ಉಪಹಾರಕ್ಕೆ ಪ್ಲಾಸ್ಟಿಕ್ ತಟ್ಟೆ, ಲೋಟ ಬಳಕೆ ಮಾಡಬಾರದು. ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ. ಜ್ಞಾನಪ್ರಕಾಶ ಸೂಚಿಸಿದರು.
ಪಾರ್ಕಿಂಗ್ ವ್ಯವಸ್ಥೆ, ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ ಬಿಸ್ನಳ್ಳಿ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ತಿಮ್ಮಪ್ಪ, ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ಆರ್. ಇಂದಿರಾ, ಸಾರಿಗೆ ಅಧಿಕಾರಿ ಸಿದ್ದಲಿಂಗಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ನಿಜಲಿಂಗಪ್ಪ ಹಾಗೂ ಇತರ ಅಧಿಕಾರಿಗಳಿದ್ದರು.