ಚನ್ನಪಟ್ಟಣ: ತಾಲ್ಲೂಕಿನ ಲಂಬಾಣಿ ತಾಂಡ್ಯದ ಬಳಿಯ ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಸತ್ತವರ ಗುರುತು ಪತ್ತೆಯಾಗಿಲ್ಲ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರು ಕಡೆಗೆ ಹೋಗುತ್ತಿದ್ದ ಫಾರ್ಚ್ಯುನರ್ ಕಾರು, ಚಾಲಕನ ನಿಯಂತ್ರಣ ಕಳೆದುಕೊಂಡು ಬೆಂಗಳೂರು ರಸ್ತೆ ಕಡೆಗೆ ನುಗ್ಗಿ ಸ್ಯಾಂಟ್ರೊ ಕಾರು ಹಾಗೂ ಇತರ ಮೂರು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಯಾಂಟ್ರೊ ಕಾರು ಚಲಾಯಿಸುತ್ತಿದ್ದ ಪುರುಷ ಹಾಗೂ ಮಹಿಳೆ ಪುರುಷರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಮಹಿಳೆ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ.
ಮೃತರು ಹಾಸನ ಮೂಲದವರು ಎಂದು ತಿಳಿದುಬಂದಿದ್ದು, ಮಾಹಿತಿ ಕಲೆ ಹಾಕಲಾಗುತ್ತಿದೆ. ಸಂಜೆ 5.30ರ ಸುಮಾರಿಗೆ ವೇಗವಾಗಿ ಹೋಗುತ್ತಿದ್ದ ಫಾರ್ಚ್ಯುನರ್ ಕಾರು ನಿಯಂತ್ರಣ ಕಳೆದುಕೊಂಡು, ಪಕ್ಕದ ರಸ್ತೆಗೆ ಜಿಗಿದಿದ್ದೇ ಸರಣಿ ಅಪಘಾತಕ್ಕೆ ಕಾರಣವಾಗಿದೆ. ಏರ್ಬ್ಯಾಗ್ ತೆರೆದುಕೊಂಡಿದ್ದರಿಂದ ಫಾರ್ಚ್ಯುನರ್ ಕಾರಿನಲ್ಲಿದ್ದವರು ಪ್ರಾಣಾಪಾಯಿಂದ ಪಾರಾಗಿದ್ದಾರೆ.
ಘಟನೆಯಲ್ಲಿ ಎರಡೂ ಕಾರುಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇತರ ವಾಹನಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ವಿ. ಸುರೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.