ಕನಕಪುರ: ದೇಶದ 18 ವರ್ಷ ತುಂಬಿದ ಪ್ರತಿ ಪ್ರಜೆ ಮತದಾನದ ಹಕ್ಕು ಪಡೆಯಬೇಕು.ಈ ಹಕ್ಕು ಪಡೆಯಲು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು ಎಂದು ತಹಶೀಲ್ದಾರ್ ಡಾ.ಸ್ಮಿತಾ ರಾಮ್ ಹೇಳಿದರು.
ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ, ತಾಲ್ಲೂಕು ಪಂಚಾಯ್ತಿ ಹಾಗೂ ರೂರಲ್ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ- 2024 ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಜಾಥಾ ಹಾಗೂ ವಿಶೇಷ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಬದಲಾವಣೆ, ಮಾಡಬಯಸಿದ್ದಲ್ಲಿ ವೋಟರ್ ಹೆಲ್ಪ್ ಲೈನ್ ಆಪ್ಲೈನ್ ಅಥವಾ ವೆಬ್ಸೈಟ್ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲವೇ ಸಂಬಂಧಿಸಿದ ಬೂತ್ ಮಟ್ಟದ ಅಧಿಕಾರಿ ಅಥವಾ ಮತದಾರರ ನೊಂದಣಾಧಿಕಾರಿ ಕಛೇರಿಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಜನವರಿ 1, ಏಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1, ಹೀಗೆ ವರ್ಷಕ್ಕೆ 4 ಅರ್ಹತಾ ದಿನಾಂಕಗಳನ್ನು ನಿಗದಿಪಡಿಸಲಾಗಿದ್ದು ಮತದಾರರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ತಾಲ್ಲೂಕ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಭೈರಪ್ಪ ಮಾತನಾಡಿದರು.
ರೂರಲ್ ಕಾಲೇಜಿನ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ನಗರದ ಮುಖ್ಯರಸ್ತೆಗಳಲ್ಲಿ ಜಾಥಾ ನಡೆಸುವ ಮೂಲಕ ಮತದಾರ ಪಟ್ಟಿಯ ಪರಿಷ್ಕರಣೆ ಮತ್ತು ನೋಂದಣಿ ಕುರಿತು ಜಾಗೃತಿ ಮೂಡಿಸಿದರು.
ನಗರಸಭೆ ಪೌರಾಯುಕ್ತ ಎಂ.ಎಸ್.ಮಹಾದೇವ್, ತಾಲ್ಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ಮೋಹನ್ ಬಾಬು, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ನಾರಾಯಣ್, ಸರ್ಕಾರಿ ನೌಕರ ಸಂಘದ ತಾಲ್ಲೂಕು ಅಧ್ಯಕ್ಷ ಶಿವಲಿಂಗೇಗೌಡ, ತಾಲ್ಲೂಕು ಪಂಚಾಯ್ತಿ ಮತ್ತು ಗ್ರಾಮ ಪಂಚಾಯ್ತಿ ಸಿಬ್ಬಂದಿ ಉಪಸ್ಥಿತರಿದ್ದರು.