ಚನ್ನಪಟ್ಟಣ: ತಾಲ್ಲೂಕು ಪರಿಶಿಷ್ಟ ಸಮುದಾಯದಿಂದ ಏ. 23ರಂದು ನಗರದ ಹೌಸಿಂಗ್ ಬೋರ್ಡ್ ಬಡಾವಣೆ ಆವರಣದಲ್ಲಿ ಸ್ವಾಭಿಮಾನಿ ಅಂಬೇಡ್ಕರ್ ಹಬ್ಬ ಆಯೋಜಿಸಲಾಗಿದೆ ಎಂದು ತಾಲ್ಲೂಕಿನ ಪರಿಶಿಷ್ಟ ಸಮುದಾಯದ ಮುಖಂಡರು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿಯೇ ಪ್ರಥಮವಾಗಿ ಒಗ್ಗಟ್ಟಿನ ಪ್ರದರ್ಶನ ಮಾಡುವ ನಿಟ್ಟಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಆಚರಣಾ ಸಮಿತಿಯಿಂದ ಅಂಬೇಡ್ಕರ್ ಹಬ್ಬ ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತರಾವ್ ಅಂಬೇಡ್ಕರ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಅಂಬೇಡ್ಕರ್ ಹಬ್ಬದ ಹಿನ್ನೆಲೆಯಲ್ಲಿ ತಾಲ್ಲೂಕಿನ ಎಲ್ಲಾ ಪರಿಶಿಷ್ಟ ಸಮುದಾಯದ ಮಂದಿ ಪಕ್ಷಾತೀತವಾಗಿ ಭಾಗವಹಿಸಲಿದ್ದಾರೆ. ಅಂದು ಪಟ್ಟಣದ ಪೊಲೀಸ್ ಠಾಣೆ ಮುಂಭಾಗದಲ್ಲಿನ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ನಗರದ ಮಂಗಳವಾರಪೇಟೆಯಿಂದ ಅಂಬೇಡ್ಕರ್ ಭಾವಚಿತ್ರವನ್ನು ಪಲ್ಲಕ್ಕಿಯಲ್ಲಿರಿಸಿ ಬೆಂಗಳೂರು– ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಲಾಗುವುದು. ಹೌಸಿಂಗ್ ಬೋರ್ಡ್ ಬಡಾವಣೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ವಿವರಿಸಿದರು.