ರಾಮನಗರ: ತೆಂಗಿನಕಲ್ಲು ಅರಣ್ಯದ ಸುತ್ತಮುತ್ತಲ ಗ್ರಾಮಗಳಲ್ಲಿ ಆನೆ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕಳೆದ 2-3 ತಿಂಗಳಿಂದ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಮೇಯುತ್ತಿವೆ. ಇದನ್ನು ತಡೆಯುವಂತೆ ಒತ್ತಾಯಿಸಿ ಇದೇ 17ರಂದು ಅರಣ್ಯ ಇಲಾಖೆಯ ಮುಂದೆ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿಗಳೇ ಖುದ್ದು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ಮಾಡಿ ರೈತರಿಗೆ ಪರಿಹಾರ ಒದಗಿಸಬೇಕು. ತೆಂಗಿನಕಲ್ಲು ಅರಣ್ಯ ಸೇರಿದಂತೆ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಇರುವ ಅರಣ್ಯದಂಚಿಗೆ ಬೇಲಿ ನಿರ್ಮಿಸಬೇಕು ಎಂದು ಆಗ್ರಹಿಸಿದರು.
ಒಂದು ವಾರದ ಒಳಗೆ ಕ್ರಮಕ್ಕೆ ಮುಂದಾಗದೇ ಹೋದಲ್ಲಿ ಆನೆಗಳು ಉರುಳಿಸಿರುವ ಮರಗಳನ್ನು ತಂದು ಡಿಸಿಎಫ್ ಕಚೇರಿ ಮುಂದಿಟ್ಟು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.